ಕದನವಿರಾಮ ಶಾಶ್ವತ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದನ್ನು ಕಾಂಗ್ರೆಸ್ಸಿನವರು ಅರ್ಥ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ಸಿನ ಇತರ ಮುಖಂಡರು ಆಪರೇಷನ್ ಸಿಂಧೂರ ಬಗ್ಗೆ ಕದನವಿರಾಮದ ಬಳಿಕ ಸ್ವಲ್ಪ ಹಗುರವಾಗಿ ಮಾತನಾಡಿದ್ದಾರೆ. ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ಗೆ ಶರಣಾಗಿದ್ದಾರೆ ಎಂಬಂತೆ ಟೀಕಿಸಿದ್ದಾರೆ. ಇದು ಸರಿಯಲ್ಲ” ಎಂದರು.
“ಕದನವಿರಾಮ ಎಂಬುದು ಒಂದು ರಾಜನೀತಿ. ಪ್ರತಿಯೊಬ್ಬ ಭಾರತೀಯರೂ ಸೇನೆ ಜೊತೆ ಇರಬೇಕು. ನಮ್ಮ ದಾಳಿಗೆ ಬೆದರಿದ ಪಾಕಿಸ್ತಾನವು ಅಮೆರಿಕದ ಸಹಾಯ ಕೇಳಿದ್ದನ್ನು ಆಲೋಚಿಸಬೇಕು. ಯಾವುದೇ ಅಹಿತಕರ ಘಟನೆ ಆದರೆ ಕಣ್ಮುಚ್ಚಿಕೊಂಡು ಕೂರುವ ಪ್ರಶ್ನೆ ಇಲ್ಲ ಎಂದು ಪ್ರಧಾನಿಯವರು ಹೇಳಿದ್ದಾರೆ. ಏನೇ ದುರ್ಘಟನೆ ಆದರೂ ಯುದ್ಧವೆಂದು ಪರಿಗಣಿಸಿ ಪ್ರತೀಕಾರ ತೀರಿಸುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.
ಪಕ್ಷರಹಿತವಾಗಿ ತಿರಂಗಾ ಯಾತ್ರೆ
“ಆಪರೇಷನ್ ಸಿಂಧೂರ ಬಳಿಕ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಅವರು ಕರೆ ನೀಡಿದ್ದು, ಇಡೀ ದೇಶದ ಎಲ್ಲ ರಾಜ್ಯಗಳಲ್ಲಿ ತಿರಂಗಾ ಯಾತ್ರೆ ನಡೆಸಬೇಕು. ‘ರಾಷ್ಟ್ರ ರಕ್ಷಣೆಗಾಗಿ ನಾಗರಿಕರು’ ಅಡಿಯಲ್ಲಿ ಆಪರೇಷನ್ ಸಿಂಧೂರ ಜೊತೆ ನಾವಿದ್ದೇವೆ; ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡಬೇಕು ಎಂದಿದ್ದಾರೆ. ಕರ್ನಾಟಕದಲ್ಲೂ ತಿರಂಗಾ ಯಾತ್ರೆ ಮಾಡಲಿದ್ದೇವೆ” ಎಂದು ವಿವರಿಸಿದರು.
“ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಇದೆ. ನಿವೃತ್ತ ಯೋಧರು, ಅವರ ಕುಟುಂಬದ ಸದಸ್ಯರು, ರೈತರು, ವೈದ್ಯರು, ಎಂಜಿನಿಯರ್ಗಳು ಸೇರಿ ಎಲ್ಲ ವೃತ್ತಿನಿರತರು, ಎಲ್ಲ ವರ್ಗದ ಜನರು ಭಾಗವಹಿಸುತ್ತಾರೆ. ಮೇ 15ರಂದು ಮಂಗಳೂರು, ಬೆಳಗಾವಿ ಮತ್ತಿತರ ಪ್ರಮುಖ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಮೇ 16ರಂದು ಶಿವಮೊಗ್ಗ ಮತ್ತಿತರ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸುತ್ತೇವೆ” ಎಂದು ಹೇಳಿದರು.
“ಮೇ 18ರಿಂದ 23ರವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರಾ ನಡೆಸಲಾಗುವುದು. ದೇಶದ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಲಿದ್ದೇವೆ” ಎಂದು ಮಾಹಿತಿ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕ ಎಸ್.ಎನ್ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ ಧನಂಜಯ್ ಸರ್ಜಿ, ವಿಧಾನಪರಿಷತ್ ಮಾಜಿ ಸದಸ್ಯ ಎಸ್ ರುದ್ರೇಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ ಸೇರಿದಂತೆ ಇತರರು ಇದ್ದರು.