ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು (ಫೆ.8) ಬೆಳಗ್ಗೆಯಿಂದ ಆಯೋಜಿಸಲಾಗಿದ್ದ ಎರಡನೇ ರಾಜ್ಯಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಿ, ನೋಂದಾಯಿಸಿಕೊಳ್ಳಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ ಎಂದು ತಿಳಿಸಿದ್ದಾರೆ.
ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು
ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3,150 ಅರ್ಜಿಗಳು ಸ್ವೀಕಾರವಾಗಿದೆ. ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1,500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.
ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ), ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ ಸೇರಿದಂತೆ ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಂದು ತಿಂಗಳೊಳಗೆ ಅರ್ಜಿ ವಿಲೇವಾರಿ ಮಾಡಿ: ಸಿಎಂ ಖಡಕ್ ಸೂಚನೆ
ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳೇ ಬಂದಿವೆ. ಒಂದು ತಿಂಗಳೊಳಗೆ ಜನಸ್ಪಂದನೆ ಅರ್ಜಿ ಅಹವಾಲುಗಳನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
“ಇಂದಿನ ಜನ ಸ್ಪಂದನೆಯಲ್ಲಿ ಸ್ವೀಕರಿಸಿರುವ ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ” ಎಂದು ಸಿಎಂ ಹೇಳಿಕೆ ನೀಡಿದರು.
“ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿದ್ದಾರೆ.