- ಬಿಜೆಪಿ ನೈತಿಕ ಪೊಲೀಸ್ಗಿರಿ ಬೆಂಬಲಿಸಿದ್ದಕ್ಕೆ ಇಂದು ಈ ಪರಿಸ್ಥಿತಿ ಬಂದಿದೆ
- ರಾಜ್ಯದಲ್ಲಿನ ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಎಂದಿದ್ದ ಸಿಎಂ ಬೊಮ್ಮಾಯಿ
ಸಾತನೂರಿನಲ್ಲಿ ನೈತಿಕ ಪೊಲೀಸ್ಗಿರಿ ಭಾಗವಾಗಿ ಒರ್ವನ ಕೊಲೆಯಾಗಿದೆ. ಇದಕ್ಕೆ ಸಿಎಂ ಹಾಗೂ ಗೃಹ ಸಚಿವರೇ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಇದೇ ವೇಳೆ ಸರ್ಕಾರ ಒತ್ತಾಯಿಸಿದ ಅವರು ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡುವಂತೆ ಆಗ್ರಹಿಸಿದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ನಾಯಕ, ಕೂಡ್ಲಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರಿಗೆ ಆಪ್ತನಾಗಿದ್ದಾನೆ. ಈ ಹಿಂದೆ ನಡೆದಿದ್ದ ನೈತಿಕ ಪೊಲೀಸ್ಗಿರಿಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಬೆಂಬಲ ನೀಡಿದ್ದರಿಂದ ಪರಿಸ್ಥಿತಿ ಹೀಗಾಗಿದೆ” ಎಂದು ಡಿಕೆಶಿ ಕಿಡಿಕಾರಿದರು.
ರಾಜ್ಯದಲ್ಲಿ ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಈ ಕೊಲೆಗೆ ಸರ್ಕಾರವೇ ಕಾರಣ. ಮುಖ್ಯಮಂತ್ರಿ ಹಾಗೂ ಗೃಹಸಚಿವರು ಘಟನೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.
“ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಕೂಡಲೇ ಬಂಧಿಸಬೇಕು. ಹತ್ಯೆ ಮಾಡಿರುವವರು ನಿಮ್ಮ ಕಾರ್ಯಕರ್ತನೋ, ಆತ್ಮೀಯನೋ ಅದು ಆಮೇಲೆ, ಅವರನ್ನು ಬಂಧಿಸದೇ ರಕ್ಷಣೆ ಮಾಡಿದರೆ, ಇದಕ್ಕೆ ಅಧಿಕಾರಿಗಳು ಜವಾಬ್ದಾರಿಯಾಗಲಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.
“ರೈತ ಜಾನುವಾರುಗಳನ್ನು ಸಂತೆಯಲ್ಲಿ ಖರೀದಿಸಿದ ರಸೀದಿ ಇದ್ದರೂ ಅವನಿಗೆ 2 ಲಕ್ಷ ಹಣದ ಬೇಡಿಕೆ ಇಟ್ಟು, ನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ಹತ್ಯೆ ಮಾಡಿದ್ದಾರೆ ಇದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಉತ್ತರಿಸಿದ ಡಿಕೆಶಿ, ‘ನಾವು ಯಾವುದೇ ಗಲಭೆ ಮಾಡಿಸುತ್ತಿಲ್ಲ. ಇದೆಲ್ಲವೂ ಮುಖ್ಯಮಂತ್ರಿಗಳು ಮಾಡಿಕೊಂಡಿರುವ ಸ್ವಯಂಕೃತ ಅಪರಾಧ’ ಎಂದರು.
ಸಿಎಂ ಮೇಲೆ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷರು, ಮುಸಲ್ಮಾನರ ಮೀಸಲಾತಿ ಕಿತ್ತುಹಾಕಿ ನಮಗೆ ನೀಡಿ ಎಂದು ಒಕ್ಕಲಿಗರು, ಲಿಂಗಾಯತರು ಕೇಳಿದ್ದರಾ? ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?:ಗೋ ರಕ್ಷಣೆಯ ನೆಪದಲ್ಲಿ 2 ಲಕ್ಷ ರೂ.ಗೆ ಬೇಡಿಕೆ: ನಿರಾಕರಿಸಿದ್ದಕ್ಕೆ ಹತ್ಯೆಗೈದ ಪುನೀತ್ ಕೆರೆಹಳ್ಳಿ
“ಕೆಲವು ಸಮುದಾಯದವರು ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಎಂದು ಕೇಳಿವೆ. ಈ ಸರ್ಕಾರ ಸಂವಿಧಾನಬದ್ಧವಾಗಿ ಕೆಲಸ ಮಾಡಿ ಎಲ್ಲಾ ವರ್ಗದವರನ್ನು ರಕ್ಷಣೆ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿ, ಈಗ ಅವರ ಹಕ್ಕು ಕಸಿಯುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಈ ಎಲ್ಲ ವರ್ಗಗಳ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ” ಎಂದು ತಿಳಿಸಿದರು.
“ಮುಖ್ಯಮಂತ್ರಿಗಳ ರಾಜಕೀಯ ಲಾಭದ ನಡೆಗೆ ರಾಜ್ಯ ದೇಶದ ಮುಂದೆ ತಲೆತಗ್ಗಿಸುವಂತಾಗಿದೆ. ಅಲ್ಪಸಂಖ್ಯಾತರನ್ನು ಆರ್ಥಿಕವಾಗಿ ಹಿಂದುಳಿದ ಮೀಸಲಾತಿ ವರ್ಗಕ್ಕೆ ಸೇರಿಸಿ ಮೇಲ್ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೂ ಈ ಸರ್ಕಾರ ಅನ್ಯಾಯ ಮಾಡುತ್ತಿದೆ. ರಾಜ್ಯಕ್ಕೆ ಕಳಂಕ ತಂದು ಎಲ್ಲ ಸಮಾಜದವರು ಪರಸ್ಪರ ಕಿತ್ತಾಡುವಂತೆ ಮಾಡಿದ್ದಾರೆ. ಇದೆಲ್ಲದಕ್ಕೂ ಮುಖ್ಯಮಂತ್ರಿಗಳೇ ನೇರ ಕಾರಣ” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.