ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವಾರವನ್ನು ಸೈದ್ಧಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದು ಸಾಕಷ್ಟು ವಿರೋಧ, ಆಕ್ಷೇಪ, ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ಈ ಬೆನ್ನಲ್ಲೇ, ಊಹಾಪೋಹಗಳಿಗೆ, ಚರ್ಚೆಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ ಅವರು ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.
— Siddaramaiah (@siddaramaiah) December 1, 2024
ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ.
ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು…
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ.