- ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
- ‘ಮನ್ ಕೀ ಬಾತ್’ ಸಾಕು ಮಾಡಿ, ‘ಕಾಮ್ ಕೀ ಬಾತ್’ ಹೇಳಿ ಎಂದ ಸಿದ್ದರಾಮಯ್ಯ
“ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ” ಎಂದು ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆದಿತ್ಯ ಎಲ್-1 ಉಡಾವಣೆಯ ಬಳಿಕ ಶನಿವಾರ ಸಂಜೆ ಸರಣಿ ಟ್ವೀಟ್ ಮಾಡಿರುವ ಅವರು, “ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು. ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ ಎಂದು ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
“ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿರುವ ಸಿಎಂ, ಇನ್ನಾದರೂ ‘ಮನ್ ಕೀ ಬಾತ್’ ಸಾಕು ಮಾಡಿ, ‘ಕಾಮ್ ಕೀ ಬಾತ್’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ? ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಎನ್ಡಿಎ ಸರ್ಕಾರದ ಸಾಧನೆಯ ಬಗ್ಗೆ ತಿಳಿಸುವಂತೆ ಸವಾಲೆಸೆದಿದ್ದಾರೆ.
“ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಭತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯುವುದಿಲ್ಲ ನರೇಂದ್ರ ಮೋದಿಯವರೇ” ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಪ್ರಹಾರ ನಡೆಸಿದ್ದಾರೆ.