- ಸಂಪುಟ ವಿಸ್ತರಣೆ ವಿಚಾರದಲ್ಲಿ ಹಿರಿಯ ನಾಯಕರಲ್ಲಿ ಅಸಮಾಧಾನ
- ಶುಕ್ರವಾರದ ಬಳಿಕ ಎಂಟು ಸಚಿವರಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆ
ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಸವಾಲಾಗಿ ಪರಿಣಮಿಸಿದ್ದು, ಈ ಸಂಬಂಧ ಇಬ್ಬರೂ ಬುಧವಾರ ದೆಹಲಿಗೆ ತೆರಳಲಿದ್ದಾರೆ.
ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹಿರಿಯ ನಾಯಕರು ತುಸು ಅಸಮಾಧಾನಗೊಂಡಿದ್ದು, ಈಗಾಗಲೇ ಸಂಪುಟ ಸೇರಿದ ಸಚಿವರಿಗೆ ಮುಂದಿನ ಶುಕ್ರವಾರದವರೆಗೂ ಖಾತೆ ಹಂಚಿಕೆಯಾಗುವುದು ಅನುಮಾನವಾಗಿದೆ.
ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವುದು ಕಾಂಗ್ರೆಸ್ ವರಿಷ್ಠರಿಗಿಂತಲೂ ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಿಂದ ಯಾರಿಗೆ ಸ್ಥಾನ ನೀಡಬೇಕೆಂಬ ವಿಚಾರದಲ್ಲಿ ಇವರಿಬ್ಬರ ನಡುವೆ ಒಮ್ಮತ ಮೂಡಿಲ್ಲ ಎಂದು ಹೇಳಲಾಗುತ್ತಿದೆ.
ಉತ್ತರ ಕರ್ನಾಟಕ ಭಾಗಕ್ಕೆ ಮತ್ತು ಲಿಂಗಾಯತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ಕೂಗು ಬಲವಾಗಿದೆ. 8 ಜನರಲ್ಲಿ ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಹಾಗೂ ಸತೀಶ್ ಜಾರಕಿಹೊಳಿ ಮಾತ್ರ ಉತ್ತರ ಕರ್ನಾಟಕ ಪ್ರತಿನಿಧಿಸುತ್ತಿದ್ದಾರೆ. ಕರಾವಳಿ ಹಾಗೂ ಮಧ್ಯ ಕರ್ನಾಟಕಕ್ಕೆ ಇನ್ನೂ ಪ್ರಾತಿನಿಧ್ಯ ಸಿಕ್ಕಿಲ್ಲ.
ಈ ಸುದ್ದಿ ಓದಿದ್ದೀರಾ? 4 ಲಕ್ಷ ಕೋಟಿ ಕೊಟ್ಟರೂ 5 ಸಾವಿರ ಕೋಟಿ ಕೊಡದ ಕೇಂದ್ರ; ಮೋದಿ ವಿರುದ್ಧ ಸಿಎಂ ಕಿಡಿ
ಬೆಂಗಳೂರಿನಿಂದ ಮೂರು ಜನರಿಗೆ ಅವಕಾಶ ಕಲ್ಪಿಸಲಾಗಿದ್ದು, ಇನ್ನೂ ಇಬ್ಬರು ಸೇರ್ಪಡೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ಮಂಡ್ಯ, ಮೈಸೂರು, ಚಾಮರಾಜನಗರದಿಂದ ಯಾರಿಗೆ ಪ್ರಾತಿನಿಧ್ಯ ಸಿಗಬಹುದೆಂಬ ಕುತೂಹಲ ಉಂಟಾಗಿದೆ.
ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಬುಧವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಶುಕ್ರವಾರದ ಹೊತ್ತಿಗೆ ಇನ್ನಷ್ಟು ಜನರು ಸಂಪುಟ ಸೇರ್ಪಡೆಯಾಗಬಹುದು. ಅದೇ ದಿನ ಎಂಟು ಸಚಿವರಿಗೆ ಖಾತೆ ಹಂಚಿಕೆಯಾಗಲಿದೆ.