ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್ ಅಶೋಕ

Date:

Advertisements

ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್‌ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್‌ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದರು.

ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ. ದಸರಾ ಉದ್ಘಾಟನೆಯನ್ನು ಹಿಂದೂಗಳ ಕೈಯಲ್ಲಿ ಮಾಡಿಸಬೇಕಿತ್ತು. ಈ ಹಬ್ಬವನ್ನು ಮೈಸೂರು ಅರಸರು ಮಾಡಿಕೊಂಡು ಬಂದಿದ್ದಾರೆ. ಇದು ಪರಂಪರೆಯೇ ಹೊರತು ಕಾನೂನಲ್ಲ. ಆದ್ದರಿಂದ ಇದಕ್ಕಾಗಿ ಪ್ರತ್ಯೇಕ ಕಾನೂನು ತರುವ ಅಗತ್ಯವಿದೆ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಿಂದ ಹಿಂದೂ-ಮುಸ್ಲಿಂ ನಡುವೆ ಒಡಕು ಮೂಡಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಬೆಂಗಳೂರಿನಲ್ಲಿ 5,000 ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್‌ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬ್ರ್ಯಾಂಡ್‌ ಬೆಂಗಳೂರು ಸಾಕಾರವಾಗಲಿದೆ. 65-70,000 ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆಯನ್ನು ಹೇರಲಾಗಿದೆ ಎಂದರು.

ಕಾಂಗ್ರೆಸ್‌ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ ಶೇ. 90 ನಷ್ಟು ಇಂಜಿನಿಯರ್‌ ಇಲ್ಲ. ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ. ಇಂತಹ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದರು.

ವಯನಾಡಿನಲ್ಲಾದ ಆನೆಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾಸನದಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚು ಪರಿಹಾರ ನೀಡಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ ಎಂದರು.

ಆನೇಕಲ್‌ನಲ್ಲಿ ಫಲವತ್ತಾದ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ. ಬಿಡದಿ ನೀರಾವರಿ ಪ್ರದೇಶವಾಗಿದ್ದು, ಇಲ್ಲಿನ ಸ್ವಾಧೀನವನ್ನು ಹಿಂದಿನ ಸರ್ಕಾರ ರದ್ದು ಮಾಡಿದೆ. ಆದರೆ ಈಗ ಮತ್ತೆ ಸ್ವಾಧೀನ ಮಾಡಲಾಗುತ್ತಿದೆ. ಕೆಂಗೇರಿ, ಯಲಹಂಕ ಸೇರಿದಂತೆ ರೈತರ 50,000 ಎಕರೆ ಜಮೀನನ್ನು ಸ್ವಾಧೀನ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ವೇಗವಾಗಿ ಗುಂಡಿ ಅಗೆದಿದೆ. ಆದರೆ ತನಿಖೆ ನಿಧಾನವಾಗಿದೆ. ತನಿಖೆಗೆ ಒಳಪಟ್ಟವರು ಹೊರಗೆ ಬಂದು ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಈ ವಿಚಾರದಲ್ಲಿ ನಾವು ಹೋರಾಟ ಮಾಡುತ್ತೇವೆ. ಇದು ಸರಿಯಾಗಿ ತನಿಖೆಯಾಗಬೇಕು. ಇದಕ್ಕಾಗಿ ಕೋರ್ಟ್‌ ಮೊರೆ ಕೂಡ ಹೋಗುತ್ತೇವೆ. ಧರ್ಮಸ್ಥಳವನ್ನು ಹಾಳು ಮಾಡಲು ಕಮ್ಯುನಿಸ್ಟ್‌ಗಳು ಪ್ರಯತ್ನ ಮಾಡಿದ್ದಾರೆ ಎಂದರು.

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಸುಪ್ರೀಂ ಕೋಟ್‌ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದಾಗಿ ಲಕ್ಷಾಂತರ ರೈತರ, ದೇವಾಲಯಗಳ ಜಮೀನು ಉಳಿದಿದೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

ಸಿದ್ದರಾಮಯ್ಯ ಗ್ಯಾರಂಟಿ ಕಾಪಿ: ಬಿಹಾರದ ಮಹಿಳೆಯರ ಮೂಗಿಗೆ ತುಪ್ಪ ಸವರಿದ ಮೋದಿ!

ಬಿಹಾರದ ರಾಜಕೀಯ ಚದುರಂಗದಾಟದಲ್ಲಿ, ಈ ಬಾರಿಯ ಚುನಾವಣೆಯಲ್ಲಿ ಗ್ಯಾರಂಟಿ ತಂತ್ರಗಾರಿಕೆ ಚುನಾವಣೆಯನ್ನು...

Download Eedina App Android / iOS

X