ತಾಕತ್ತಿದ್ದರೆ ಬಿಜೆಪಿ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿ ಕಳಿಸಲಿ: ನಡ್ಡಾಗೆ ಸವಾಲೆಸೆದ ಸಿಎಂ

Date:

Advertisements

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಐವರು ಮಹಿಳಾ ಸದಸ್ಯರನ್ನೊಳಗೊಂಡ ಸತ್ಯಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

“ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಣ್ಣು ಮುಚ್ಚಿ ಕೂತಿದ್ದರು. ಈಗ ಅವರ ನಿದ್ದೆಗಣ್ಣಿಗೆ ಬೆಳಗಾವಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಕಾಣಿಸಿಕೊಂಡಿದ್ದು, ಅದರಲ್ಲಿ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ದ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನ ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಕತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಅಧ್ಯಕ್ಷರಿಗೆ ಸಿಎಂ ಸವಾಲೆಸೆದಿದ್ದಾರೆ.

Advertisements

“ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ” ಎಂದು ಸಿದ್ದರಾಮಯ್ಯ ಜರೆದಿದ್ದಾರೆ.

“ಬೆಳಗಾವಿಯ ಘಟನೆ ಗೊತ್ತಾದ ಕ್ಷಣವೇ ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು, ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು 24 ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ. ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿ ಖಂಡಿತ ಅಲ್ಲ” ಎಂದು ಸಿಎಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಿರುದ್ಧ ಕೆಂಡಕಾರಿದ್ದಾರೆ.

“ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯೂರೋ ವರದಿಯ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದ 17,813 ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: 5 ಮಂದಿಯ ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ

“ಮಣಿಪುರದಿಂದ ಗುಜರಾತ್‌ವರೆಗೆ, ಉತ್ತರ ಪ್ರದೇಶದಿಂದ ಮಧ್ಯಪ್ರದೇಶದವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ” ಎಂದು ಸಿಎಂ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X