“ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ಕೋವಿಡ್ ಬಗ್ಗೆ ಮಾಧ್ಯಮಗಳು ವೈಭವೀಕರಿಸಿ ಜನರಲ್ಲಿ ಆತಂಕ ಸೃಷ್ಟಿಸಬಾರದು” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿರುವುದು ನಿಜ, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್ 19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ” ಎಂದು ತಿಳಿಸಿದರು.
“ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತ ನಡೆ. ಕೋವಿಡ್ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ, ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ. ಮಾಧ್ಯಮಗಳು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರೆ ಒಳಿತು. ಅದುಬಿಟ್ಟು ವೈಭವೀಕರಣ ಮಾಡಿದರೆ ಜನರಲ್ಲೂ ಆತಂಕ ಸೃಷ್ಟಿಯಾಗಿ, ಗೊಂದಲಗಳು ಉಂಟಾಗುತ್ತದೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಬಾನುಗೆ ಬೂಕರ್ ಪ್ರಶಸ್ತಿ: ಅಭಿನಂದನೆ ಸಲ್ಲಿಸಲೂ ಮೋದಿ ಹೃದಯ ದಾರಿದ್ರ್ಯ
“Severe Acute Respiratory Illness ( SARI ) ಲಕ್ಷಣಗಳನ್ನು ಹೊಂದಿರುವವರು ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು. ಆದ್ಯತೆಯ ಮೇಲೆ ಕೋವಿಡ್ -19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ. ಕೋವಿಡ್ನ ಸಂದರ್ಭದಲ್ಲಿ ಪಾಲಿಸಬೇಕಾದ ಎಲ್ಲ ಮುನ್ನೆಚ್ಚರಿಕೆಗಳನ್ನು ಜನರು ಪಾಲಿಸುವಂತೆ ಕೇಂದ್ರ ಸರ್ಕಾರ ಕೂಡ ನಮಗೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆಯು ಎಲ್ಲ ಬೆಳವಣಿಗೆಗಳ ಬಗ್ಗೆ ಗಮನ ವಹಿಸುತ್ತಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
“ಕೇರಳದಲ್ಲಿ ಹೆಚ್ಚು ಪರೀಕ್ಷೆ ನಡೆಸುತ್ತಿರುವುದರಿಂದ ಕೋವಿಡ್ ಪಾಸಿಟಿವ್ ಕೆಲವೊಂದು ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಕೂಡ ಮಾಹಿತಿ ನೀಡಿಲ್ಲ. ಜನರು ಆರಾಮವಾಗಿ ಇರಬಹುದು. ಆದರೆ, ಮುನ್ನೆಚ್ಚರಿಕೆ ವಹಿಸಿಕೊಳ್ಳುವುದು ಸೂಕ್ತ. ಸದ್ಯಕ್ಕೆ ಗಂಭೀರವಾದ ಸಮಸ್ಯೆ ಇರುವ ರೋಗಿಗಳು ಯಾರೂ ಕಂಡುಬಂದಿಲ್ಲ” ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.