ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ ದಲಿತರ ಗುಡಿಸಲಿಗಳಲ್ಲಿ ಹೋರಾಟದ ಹಣತೆಯನ್ನು ಹಚ್ಚಿದ ನಾಯಕ. ಚಂದ್ರಗುತ್ತಿಯಲ್ಲಿ ಬೆತ್ತಲೆ ಸೇವೆ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡಿದ ಕರ್ನಾಟಕದ ಅಂಬೇಡ್ಕರ್ ಎಂದು ಹೆಸರು ಮಾಡಿರುವ ಇವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಜನ್ಮದಿನವನ್ನು ಸರ್ಕಾರಿ ಹಬ್ಬವನ್ನಾಗಿ ಆಚರಿಸಬೇಕು ಎನ್ನುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಅಲ್ಲದೇ ಸುಮಾರು 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನಂ.47/74-75 ಹೋರಾಡುತ್ತ ಬಂದಿದ್ದು, ಮಾನ್ಯ ಸುಪ್ರಿಂಕೋರ್ಟ್ ಆದೇಶದಂತೆ ವಿಳಂಬ ಮಾಡದೆ ಒಳಮೀಸಲಾತಿ ಜಾರಿಗೆ ತರಬೇಕು.
ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು. ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು. ಸಮಾಜ ಕಲ್ಯಾಣ ಇಲಾಖೆಯ ಬಜೆಟ್ನಲ್ಲಿ ಮತ್ತು ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಒಳ ಮೀಸಲಾತಿ ಪಟ್ಟಿಯಲ್ಲಿ ಬೇಡ ಜಂಗಮ ನಕಲಿ ಪ್ರಮಾಣ ಪತ್ರವನ್ನು ಪಡೆದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬಗರ್ಹುಕುಂದಾರರಿಗೆ ಹಕ್ಕು ಪತ್ರ ನೀಡಬೇಕು. ದಲಿತ ಮತ್ತು ಹಿಂದುಳಿದ ನಿರಾಶ್ರಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕು. ದಲಿತ ಮತ್ತು ಹಿಂದುಳಿದವರು ವಾಸಿಸುವ ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕೆ ಪ್ರತ್ಯೇಕ ಜಾಗವನ್ನು ನೀಡಬೇಕು. ಕಬ್ಬೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಸ್ಮಶಾನವನ್ನು ನಾಶಪಡಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅದೇ ಗ್ರಾಮದಲ್ಲಿ ಸುಮಾರು 15 ಎಕರೆ ಗೋಮಾಳವನ್ನು ಅಕ್ರಮವಾಗಿ ಸಾಗುವಳಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ 10 ಎಕರೆ ನಿವೇಶನವನ್ನು ದಲಿತ ಮತ್ತು ಹಿಂದುಳಿದ ನಿರಾಶ್ರಿತರು ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ ನ್ಯಾಯಕ್ಕೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿ ಮುಖ್ಯ; ಗಣತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್, ಜಿಲ್ಲಾ ಮಹಿಳಾ ಸಂಚಾಲಕ ವಿಜಯಮ್ಮ, ಜಿಲ್ಲಾ ಸಂಘಟನಾ ಸಂಚಾಲಕ ಕಬ್ಬೂರು ಮಂಜುನಾಥ್, ಖಾಲಿದ್ ಆಲಿ, ತಾಲೂಕು ಸಂಘಟನಾ ಸಂಚಾಲಕರಾದ ಚಿತ್ತನಹಳ್ಳಿ ನಾಗರಾಜ್ ಮತ್ತು ಇತರರು ಹಾಜರಿದ್ದರು.