ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಎಪಿ 21 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ.
ಎಎಪಿಯ ಪ್ರಮುಖರಿಗೆ ಹಿನ್ನಡೆ ಉಂಟಾಗಿದೆ. ಎಎಪಿ ಸಂಚಾಲಕ ಅರವಿಂದ ಕೇಜ್ರವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದೇಶದ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 27 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸುತ್ತದೆಯೇ ಎಂಬುದು 11 ಗಂಟೆ ಹೊತ್ತಿಗೆ ಒಂದು ಚಿತ್ರಣ ಸಿಗಲಿದೆ.
ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5 ರಂದು ಮತದಾನ ನಡೆದಿತ್ತು. ಕೇಂದ್ರ ಚುನಾವಣಾ ಆಯೋಗದ ಪ್ರಕಾರ ಶೇ.60.54ರಷ್ಟು ಮತಗಳು ಚಲಾವಣೆಯಾಗಿದೆ. 2020 ಕ್ಕೆ ಹೋಲಿಸಿದರೆ ಶೇ 2.5 ರಷ್ಟು ಕಡಿಮೆಯಾಗಿದೆ.
ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಎರಡು ಚುನಾವಣೋತ್ತರ ಸಮೀಕ್ಷೆಗಳು ಮಾತ್ರ ಆಮ್ ಆದ್ಮ ಪಕ್ಷ (ಎಎಪಿ) ವಿಜಯಶಾಲಿಯಾಗಿ, ಮತ್ತೆ ಅಧಿಕಾರದ ಗದ್ದುಗೆ ಮರಳಲಿದೆ ಎಂದಿವೆ.