- ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಗೆ ವಾರದ ಗಡುವು
- ಬಗರ್ ಹುಕುಂ ಅರ್ಜಿ ಸುಲಭ ವಿಲೇಗೆ ಆ್ಯಪ್ ಬಿಡುಗಡೆ
ಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರದ ಹಣ ಸಿಗದಿದ್ದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಕಾರಣ ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು.
ಜಿಲ್ಲಾಧಿಕಾರಿಗಳ ಜೊತೆಗೆ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ ಎಚ್ಚರಿಸಿದ ಸಚಿವರು, “ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ. ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ನ್ನೂ ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಸಮಾಧಾನ ಹೊರಹಾಕಿದರು.
“ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿನ ಸಾಧನೆ ತೀರಾ ಕಳಪೆಯಾಗಿದೆ. ಬರ ಪರಿಹಾರ ಹಣವನ್ನು ನೀಡಲು ರಾಜ್ಯ ಸರ್ಕಾರ ಸಿದ್ದವಾಗಿದೆ. ಖಜಾನೆಯಲ್ಲಿ ಹಣವೂ ಇದೆ. ಆದರೆ, ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಕೂಡ ರೈತರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇನ್ನಾದರೂ ಆಂದೋಲನ ಮಾದರಿಯಲ್ಲಿ ಕೆಲಸ ಮಾಡಬೇಕಾಗಿದೆ” ಎಂದು ಸ್ಪಷ್ಟವಾಗಿ ಸೂಚಿಸಿದರು.
ಡಿ.22ರೊಳಗೆ ಮುಗಿಸಲು ಗಡುವು
ಶೀಘ್ರದಲ್ಲಿ ತಾಲೂಕು ಹೋಬಳಿ ಸಭೆ ನಡೆಸಿ ಎಲ್ಲ ಅಧಿಕಾರಿಗಳನ್ನು ಸ್ಥಳ ವೀಕ್ಷಣೆಗೆ ಕಳುಹಿಸಿ ಡಿಸೆಂಬರ್ 22ರ ಒಳಗಾಗಿ ರೈತರ ಜಮೀನಿನ ಸಂಪೂರ್ಣ ಮಾಹಿತಿಯನ್ನು ನಮೂದಿಸಿ ಎಂದು ಸಚಿವರು ಸಮಯದ ಗಡುವು ನೀಡಿದರು.
ಇದೇ ಸಮಯದಲ್ಲಿ ನೀರಿನ ಸಮಸ್ಯೆಯನ್ನು ಸೂಕ್ತ ಮಾದರಿಯಲ್ಲಿ ನಿಭಾಯಿಸಿದ್ದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಬಗ್ಗೆಯೂ ಮೆಚ್ಚುಗೆ ಸೂಚಿಸಿದರು. ಬರ ಘೋಷಿಸಲಾಗಿದ್ದರೂ ರಾಜ್ಯದ 134 ತಾಲೂಕುಗಳಲ್ಲಿ ಈವರೆಗೆ ಟಾಸ್ಕ್ ಫೋರ್ಸ್ ಸಭೆ ನಡೆಸಿಲ್ಲ. ಹೀಗಾಗಿ ಅಧಿಕಾರಿಗಳು ಈ ಬಗ್ಗೆಯೂ ಗಮನ ನೀಡಬೇಕು ಎಂದು ಸಚಿವ ಬೈರೇಗೌಡ ಸೂಚಿಸಿದರು.
ಸಭೆಯಲ್ಲಿ ಅರ್ಹ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಕುರಿತೂ ಚರ್ಚೆ ನಡೆಸಲಾಯಿತು. ಈ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು, ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅರ್ಹ ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಿ ಹಕ್ಕುಪತ್ರ ವಿತರಿಸಿ ಎಂದು ತಾಕೀತು ಮಾಡಿದರು.
ಬಗರ್ ಹುಕುಂ ಆ್ಯಪ್ ಬಿಡುಗಡೆ
ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲೇ ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಬಗರ್ ಹುಕುಂ ಆ್ಯಪ್ ಅನ್ನು ಬಿಡುಗಡೆಗೊಳಿಸಿದರು.
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಂಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.