ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2018, 2019, 2020, 2021, 2022 ಹಾಗೂ 2023ನೇ ಸಾಲಿನ ‘ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ.
ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿ ಪ್ರದಾನ ಮಾಡದೇ ಇರುವುದರಿಂದ ಈ ಬಾರಿ ಆರು ಮಂದಿ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
- 2018ನೇ ಸಾಲಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ಕೋಲಾರದ ಕೋಟಿಗಾನಹಳ್ಳಿ ರಾಮಯ್ಯ
- 2019ನೇ ಸಾಲಿನ ಪ್ರಶಸ್ತಿಗೆ ಕಲಬುರಗಿಯ ಡಾ. ಎಚ್ ಟಿ ಪೋತೆ
- 2020ನೇ ಸಾಲಿನ ಪ್ರಶಸ್ತಿಗಾಗಿ ವಿಜಯಪುರದ ಇಂದುಮತಿ ಲಮಾಣಿ
- 2021ನೇ ಸಾಲಿನ ಪ್ರಶಸ್ತಿಗಾಗಿ ಬೆಂಗಳೂರಿನ ಡಾ. ಕಾ ವೆಂ ಶ್ರೀನಿವಾಸಮೂರ್ತಿ
- 2022ನೇ ಸಾಲಿನ ಪ್ರಶಸ್ತಿಗಾಗಿ ಗದಗದ ಡಾ. ಅರ್ಜುನ ಗೊಳಸಂಗಿ
- 2023ನೇ ಸಾಲಿನ ಪ್ರಶಸ್ತಿಯನ್ನು ಹಾಸನದ ನಾಗರಾಜ ಹೆತ್ತೂರು

ಶ್ರವಣಬೆಳಗೊಳದಲ್ಲಿ ನಡೆದ 81ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿಗಾಗಿ ಆ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ’ಗಾಗಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿಯನ್ನು ಸ್ಥಾಪಿಸಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವುದು ದತ್ತಿಯ ಮೂಲ ಆಶಯವಾಗಿದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಶಿ ಹೇಳಿದ್ದಾರೆ.
ಕನ್ನಡ ನಾಡಿನಲ್ಲಿ ದಲಿತ ಸಾಹಿತ್ಯ ಕ್ಷೇತ್ರಗಳಲ್ಲಿ ಅಪರಿಮಿತ ಸಾಧನೆ ಮಾಡಿರುವ ಗಣ್ಯರನ್ನು ಸೂಕ್ಷ್ಮವಾಗಿ ಗುರುತಿಸಿ ಪರಿಷತ್ತು ಸ್ಥಾಪಿಸಿರುವ ಈ ದತ್ತಿ ಆಶಯಕ್ಕೆ ಯಾವುದೇ ಚ್ಯುತಿಯಾಗದ ರೀತಿಯಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಒಳ ಮೀಸಲಾತಿ ಜಾರಿ ಮಾಡಿ ಸಿದ್ದರಾಮಯ್ಯ ಬದ್ಧತೆ ಪ್ರದರ್ಶಿಸಲಿ: ಎ ನಾರಾಯಣಸ್ವಾಮಿ ಸವಾಲು
ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼಯು 10,000 ರೂ. ನಗದು, ಸ್ಮರಣಿಕೆ ಮತ್ತು ಫಲ ತಾಂಬೂಲ ಒಳಗೊಂಡಿರುತ್ತದೆ. ಇದುವರೆಗೆ ಇಬ್ಬರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ರಮಾಕುಮಾರಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ನೇ ಭ ರಾಮಲಿಂಗ ಶೆಟ್ಟಿ ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ ಎಂ ಪಟೇಲ್ ಪಾಂಡು ಇದ್ದರು.