ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್ ಅವರಿಗೆ ಮನವಿ ಸಲ್ಲಿಸಿತು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, “ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ರೈತರಿಗೆ ಪರಿಹಾರ ನೀಡದೇ ರಾಜಕೀಯ ಮಾಡುತ್ತ ಕಾಲಹರಣ ಮಾಡುತ್ತಿದೆ. ರೈತರಿಗೆ ನ್ಯಾಯ ಕೊಡದಿರುವ ಸರ್ಕಾರ ಬಹಳ ದಿನ ಉಳಿಯುವುದಿಲ್ಲ” ಎಂದು ಕಿಡಿಕಾರಿದರು.
“ಬರ, ಪ್ರವಾಹ ಬಂದರೆ ಜನ ಸಂಕಷ್ಟದಲ್ಲಿ ಇದ್ದಾಗ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಅದು ಜೀವಂತ ಇದ್ದಂತೆ. ಸರ್ಕಾರ ರೈತರ ಕಡೆ ನೋಡದಿದ್ದರೆ ಅದು ಸತ್ತಂತೆ. ರಾಜ್ಯ ಸರ್ಕಾರ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ 18,000 ಕೋಟಿ ರೂ. ನೀಡುವಂತೆ ಮನವಿ ಮಾಡಿದೆ. ಆದರೆ, ನೀವು ಕೇವಲ 105 ಕೋಟಿ ಬಿಡುಗಡೆ ಮಾಡಿದ್ದೀರಿ, ಅದು ಕೇವಲ ಶೇಕಡಾ 1% ಕೂಡ ಆಗುವುದಿಲ್ಲ” ಎಂದರು.
“ಬೆಳಗಾವಿ ಅಧಿವೇಶನಕ್ಕೂ ಮುಂಚೆಯೇ ಪ್ರತಿ ಹೆಕ್ಟೇರ್ ಗೆ 2,000 ರೂ ಬೆಳೆ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಅಧಿವೇಶನ ಮುಗಿದು ಒಂದು ತಿಂಗಳು ಕಳೆಯುತ್ತಿದ್ದರೂ, ಹಣ ಬಿಡುಗಡೆ ಮಾಡದೆ ಆಧಾರ್ ಲಿಂಕ್ ಮಾಡುವ ಕಥೆ ಹೇಳುತ್ತಾರೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಫ್ರುಟ್ ಸಾಪ್ಟ್ ವೇರ್ ನಲ್ಲಿ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ. ರೈತರಿಗೆ ನ್ಯಾಯ ಕೊಡದಿರುವ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು 14 ಲಕ್ಷ ರೈತರ ಖಾತೆಗೆ ನೇರವಾಗಿ ಪರಿಹಾರದ ಹಣ ವರ್ಗಾವಣೆ ಮಾಡಿದ್ದೆವು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್ ರಾಜಕಾರಣ
“ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಜೆಟ್ ನಲ್ಲಿ ಮೀಸಲಿಟ್ಟ 3,000 ಕೋಟಿ ರೂ.ಗಳಲ್ಲಿ ಇದುವರೆಗೂ ಒಂದು ರೂಪಾಯಿ ಖರ್ಚಾಗಿಲ್ಲ. ಗೃಹ ಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಗೃಹಜ್ಯೋತಿ, ಯುವ ನಿಧಿ ಯೋಜನೆಗಳಿಂದಲೂ ಜನರಿಗೆ ಪ್ರಯೋಜನವಾಗಿಲ್ಲ. ಯಾವುದೇ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ತಲುಪುತಿಲ್ಲ” ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದಲೂ ಪರಿಹಾರದ ಹಣ ಬಿಡುಗಡೆಯಾಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಕೇಂದ್ರ ಸರ್ಕಾರ ಮೂರು ತಿಂಗಳಿಗೊಮ್ಮೆ ಇಡೀ ದೇಶಕ್ಕೆ ಎನ್ ಡಿ ಆರ್ ಎಫ್ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ಎನ್ ಡಿ ಆರ್ ಎಫ್, ಎಸ್ ಡಿಆರ್ ಎಫ್ ನಿದಿಯಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ ಎಷ್ಟು ಹಣ ಇದೆ ಎಂದು ಸರ್ಕಾರ ಬಹಿರಂಗ ಪಡೆಸಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಕೆ. ಗೋಪಾಲಯ್ಯ, ಶಾಸಕಾರದ ಎಸ್ ರಘು, ರವಿ ಸುಬ್ರಮಣ್ಯ, ಕೆ. ರಾಮಮೂರ್ತಿ ಹಾಜರಿದ್ದರು.