“ಕೇಂದ್ರ ಸರ್ಕಾರದ ವಿರುದ್ಧ ಈವರೆಗೂ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅವರ ಅನ್ಯಾಯ ನೋಡಿ ನೋಡಿ ಸಾಕಾಗಿದೆ. ಅನಿವಾರ್ಯವಾಗಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ” ಎಂದು ಕಿಡಿಕಾರಿದರು.
“ಫೆ.7 (ಬುಧವಾರ) ದೆಹಲಿಯ ಜಂತರ್ ಮಂತರ್ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಇದೇ ವೇಳೆ ಮನವಿ ಮಾಡಿದರು.
ದಮ್ಮು, ತಾಕತ್ ಬೇಡ; ರಾಜಕೀಯ ಇಚ್ಛಾಶಕ್ತಿ ಇರಬೇಕು
This video cannot be played in your browser. Open the video directly
ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿದ ಸಿದ್ದರಾಮಯ್ಯ, “ಮೋದಿ ಸುಳ್ಳುಗಳಿಗೆ ನೀವು ಯಾರೂ ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ. 4,530 ಕೋಟಿ ರೂಪಾಯಿ ಹಣ ಈಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ. ‘ತಾಕತ್ ಇದ್ರೆ, ಧಮ್ ಇದ್ರೆ’ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಇವೆಲ್ಲವೂ ಮಾಡೋಕೆ ಧಮ್ಮು, ತಾಕತ್ ಬೇಡ. ರಾಜಕೀಯ ಇಚ್ಛಾಶಕ್ತಿ ಇರಬೇಕು. ನಮ್ಮದೇನಿದ್ದರೂ ಬಡವರ ಬಗ್ಗೆ ಬದ್ಧತೆ ಅಷ್ಟೇ. ಧಮ್, ತಾಕತ್ ಏನಿದ್ದರೂ ಬಿಜೆಪಿಯವರದ್ದು” ಎಂದು ವಾಗ್ದಾಳಿ ನಡೆಸಿದರು.
ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನ
“ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
“ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು. ಆದರೆ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಧಿಕ್ಕರಿಸಿ ನಡೆಯುತ್ತಿದೆ” ಎಂದರು.
“14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು. ಆ ಪ್ರಕಾರ ನಡೆದುಕೊಂಡಿದ್ದಾರಾ ಮೋದಿ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?
“ಜಲಮೂಲಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸು ಮಾಡಲಾಗಿತ್ತು. ಒಟ್ಟು ಕೇಂದ್ರ ಸರ್ಕಾರದಿಂದ 11,495 ಕೋಟಿ ರೂಪಾಯಿ ರಾಜ್ಯಕ್ಕೆ ಬರಬೇಕಿತ್ತು. ಒಟ್ಟು 5 ವರ್ಷದಲ್ಲಿ 73 ಸಾವಿರ ಕೋಟಿ ನಮಗೆ ಕಡಿಮೆಯಾಗಿದೆ. ಬಳಿಕ ಜಿಎಸ್ಟಿ ವ್ಯವಸ್ಥೆ ಜಾರಿಯಾಯಿತು. ಜಿಎಸ್ಟಿಯಿಂದ ತೆರಿಗೆ ಹೆಚ್ಚಳವಾಗುತ್ತೆ. ರಾಜ್ಯಗಳಿಗೆ ನಷ್ಟವಾದರೆ ಪರಿಹಾರ ರೂಪದಲ್ಲಿ ಹಣ ನೀಡುತ್ತೇವೆ ಎಂದಿದ್ದರು. ಆ ಪ್ರಕಾರ ಕೇಂದ್ರ ಸರ್ಕಾರ ನಡೆದುಕೊಂಡಿದೆಯಾ?” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡುತ್ತೇವೆ ಎಂದು ತಾವೇ ಬಜೆಟ್ನಲ್ಲಿ ಘೋಷಿಸಿದ್ದರು. ಈಗ ಮರಳಿ ಮತ್ತೆ ಬಜೆಟ್ ಮಂಡನೆ ಆಗಿದೆ. ಘೋಷಣೆ ಹಣ ಎಲ್ಲಿದೆ? ಮಹದಾಯಿ ಯೋಜನೆ ಜಾರಿ ಮಾಡಲು ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಮಾಡಿಕೊಡಿ ಎಂದು ಎಷ್ಟೇ ಮನವಿ ಸಲ್ಲಿಸಿದರೂ ಈವರೆಗೂ ಪ್ರತಿಕ್ರಿಯೆ ಇಲ್ಲ. ಗೆಜೆಟ್ ನೋಟಿಫಿಕೇಶನ್ ಆಗಿದೆ. ಆದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ” ಎಂದರು.





