“ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಈ ಸೇತುವೆ ಕಾಮಗಾರಿ ಆರಂಭಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಹನುಮಂತಪ್ಪ ನಿರಾಣಿ ಅವರು ಈ ಸೇತುವೆ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಉತ್ತರಿಸಿದರು.
“ಈ ವಿಚಾರದಲ್ಲಿ ನಮ್ಮ ಇಲಾಖೆಯ ತಪ್ಪಿದೆ. ಕಾರಣ ಅವರು ಸೇತುವೆಯ ಎತ್ತರ ಅಂದಾಜು ಮಾಡುವಾಗ ಸರಿಯಾಗಿ ಮಾಡಿಲ್ಲ. ನೀರಿನ ಪ್ರಮಾಣ ಹೆಚ್ಚಾಗಿ ಹರಿದಾಗ ಅದರ ಎತ್ತರದ ಬಗ್ಗೆ ಸರಿಯಾಗಿ ಲೆಕ್ಕಾಚಾರ ಮಾಡಿಲ್ಲ” ಎಂದು ಸದನಕ್ಕೆ ತಿಳಿಸಿದರು.
“ದಾವಣಗೆರೆಯ ಗುತ್ತಿಗೆದಾರರಿಗೆ ಇದರ ಗುತ್ತಿಗೆ ನೀಡಲಾಗಿತ್ತು. ಆರಂಭದಲ್ಲಿ 24 ತಿಂಗಳಲ್ಲಿ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಮೊದಲು ಈ ಸೇತುವೆಯನ್ನು 480 ಮೀಟರ್ ನಷ್ಟು ಉದ್ದ, 533 ಮೀ ಎತ್ತರ ಮಾಡಲು ತೀರ್ಮಾನಿಸಲಾಗಿತ್ತು. ಈಗ ಸೇತುವೆ ಗಾತ್ರವನ್ನು ಪರಿಷ್ಕರಿಸಿ ಇದನ್ನು ಕ್ರಮವಾಗಿ 680 ಹಾಗೂ 534 ಮೀ.ಗೆ ಏರಿಕೆ ಮಾಡಲಾಗಿದೆ. ಇದರ ಅಂದಾಜು ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸಲಾಗಿದೆ. ಉಪ ಸಮಿತಿ ಇದಕ್ಕೆ ಅನುಮತಿ ನೀಡಿದ್ದು ಮಂಡಳಿ ಸಭೆಯಲ್ಲಿ ಇದನ್ನು ಪಾಸ್ ಮಾಡಲಾಗಿದೆ. ಹೆಚ್ಚುವರಿ 40 ಕೋಟಿಗೆ ಸರ್ಕಾರ ಅನುಮತಿ ನೀಡಿದ್ದು, ಆದಷ್ಟು ಬೇಗ ಈ ಕಾಮಗಾರಿ ಆರಂಭಿಸಲಾಗುವುದು” ಎಂದು ತಿಳಿಸಿದರು.
ಪರಿಷತ್ ಸದಸ್ಯ ವೈ.ಎಂ ಸತೀಶ್ ಅವರು ಕುಡಿಯುವ ನೀರಿನ ಸಮಸ್ಯೆ, ಸಂಡೂರು ಕೆರೆ ತುಂಬಿಸುವ ಯೋಜನೆ, ಕೊಟ್ಟೂರು ಭಾಗದಲ್ಲಿ 16 ಕೆರೆ ತುಂಬಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಇದೇ ವೇಳೆ ಉತ್ತರಿಸಿದ ಡಿಸಿಎಂ, “ಇವು ಬಳ್ಳಾರಿ ಗ್ರಾಮಾಂತರ ಭಾಗದ ಹೊಸ ಯೋಜನೆಗಳಾಗಿವೆ. ಇನ್ನು ಕುಡಿಯುವ ನೀರಿನ ಪೂರೈಕೆಗೆ 48 ಕೋಟಿ ಮೊತ್ತದ ಯೋಜನೆ ಅಂದಾಜಿಸಲಾಗಿದೆ. ಕೊಟ್ಟೂರಿನ 16 ಕೆರೆ ತುಂಬಿಸಲು ₹399 ಕೋಟಿ ಅಂದಾಜಿಸಲಾಗಿದೆ. ಸಂಡೂರು ತಾಲೂಕಿನ ಕೆರೆ ತುಂಬಿಸಲು ₹1355 ಕೋಟಿ ಅಂದಾಜಿಸಲಾಗಿದೆ” ಎಂದರು.
“ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ₹5300 ಕೋಟಿ ಅನುದಾನ ಬರಬೇಕಿತ್ತು. ಬೊಮ್ಮಾಯಿ ಅವರು ಕೂಡ ಸಿಎಂ ಆಗಿದ್ದಾಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಮಾತು ಕೊಟ್ಟರೂ ಹಣ ನೀಡಲಿಲ್ಲ. ನಮ್ಮ ಇಲಾಖೆಯ ಬಜೆಟ್ ಕೂಡ 19 ಸಾವಿರ ಕೋಟಿಯಿಂದ 15 ಸಾವಿರ ಕೋಟಿಗೆ ಇಳಿದಿದೆ. ಮುಂದಿನ ದಿನಗಳಲ್ಲಿ ಹಣಕಾಸಿನ ಸಾಧ್ಯತೆ ನೋಡಿಕೊಂಡು ನಾವು ತೀರ್ಮಾನ ಮಾಡುತ್ತೇವೆ. ನಮ್ಮ ಇಲಾಖೆಯಲ್ಲಿ ಈಗಾಗಲೇ 1.25 ಲಕ್ಷ ಕೋಟಿಯಷ್ಟು ಕಾಮಗಾರಿಗಳು ನಡೆಯುತ್ತಿವೆ. ಈಗ ನಡೆಯುತ್ತಿರುವ ಕಾಮಗಾರಿಗಳ ಗುತ್ತಿಗೆದಾರರಿಗೆ 10ರಿಂದ 15% ಬಿಲ್ ಪಾವತಿ ಮಾಡುವ ಪರಿಸ್ಥಿತಿ ಇದೆ” ಎಂದು ಡಿಕೆ ಶಿವಕುಮಾರ್ ವಿವರಿಸಿದರು.
ಇದನ್ನು ಓದಿದ್ದೀರಾ? ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್
ಪ್ರಹ್ಲಾದ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಳಿದಾಗ, “ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಬಗ್ಗೆ ಪೂಜಾರ್ ಅವರಿಗೆ ಸಂಪೂರ್ಣ ಮಾಹಿತಿ ಇದೆ. 2010ರಲ್ಲಿ ರಾಜ್ಯಕ್ಕೆ 173 ಟಿಎಂಸಿ ಬಂದಿದೆ. ಈ ವಿಚಾರವಾಗಿ ನೋಟಿಫಿಕೇಷನ್ ಆಗುವುದಕ್ಕೆ ನಾವು ಕಾಯುತ್ತಿದ್ದೇವೆ. 2017ರಲ್ಲಿ 52 ಸಾವಿರ ಕೋಟಿ ಅಂದಾಜು ಮಾಡಲಾಗಿತ್ತು. 1,33,867 ಎಕರೆ ಭೂಸ್ವಾಧೀನ ಮಾಡಬೇಕಾಗಿದೆ. ಈವರೆಗೂ 28 ಸಾವಿರ ಎಕರೆ ಭೂಸ್ವಾಧೀನ ಮಾಡಲಾಗಿದೆ. ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಹೊಸ ತೀರ್ಮಾನ ಮಾಡಿ ಭೂಸ್ವಾಧೀನಕ್ಕೆ ಒಣ ಭೂಮಿಗೆ 20 ಲಕ್ಷ ನೀಡಬೇಕು, ನೀರಾವರಿ ಭೂಮಿಗೆ 24 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ನನಗೆ ಯೋಜನೆ ಏನಾದರೂ ಆಗಲಿ ಭೂಸ್ವಾಧೀನ ಈಗಿನಿಂದಲೇ ಮಾಡಿ ಎಂದು ಒತ್ತಡ ಬರುತ್ತಿದೆ. ಇರುವ ಯೋಜನೆ ಪೂರ್ಣಗೊಳಿಸಬೇಕು ಎಂದು ಮುಂದಾಗಿದ್ದೇವೆ” ಎಂದು ತಿಳಿಸಿದರು.
