ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿರ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ” ಎಂದರು.
“1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2,000 ನೀಡುತ್ತಿರುವುದು ಸತ್ಯವಲ್ಲವೇ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಭೇದವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್ 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವಾದುದನ್ನು ಬರೆಯಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್ ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ
ಯುವನಿಧಿ ಯೋಜನೆಗೆ ಇಂದು ಚಾಲನೆ
“ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಇಂದು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3,000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಈ ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ” ಎಂದರು.