ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ನ ಮಾಜಿ ಸಚಿವ ಅಂಜನಮೂರ್ತಿ ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನೆಲಮಂಗಲದ ಇಂದಿರಾನಗರದಲ್ಲಿ ವಾಸಿಸುತ್ತಿದ್ದ ಅಂಜನಮೂರ್ತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಂಜನಮೂರ್ತಿ ಅವರು 1989-1994, 1999-2004, 2004-2007 ಮೂರು ಅವಧಿಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1993ರ ಫೆಬ್ರವರಿಯಿಂದ 1994ರ ಡಿಸೆಂಬರ್ವರೆಗೆ ವಿಧಾನಸಬಾ ಉಪಸಭಾಪತಿ ಆಗಿ ಸೇವೆ ಸಲ್ಲಿಸಿದ್ದರು. 2003 ರಿಂದ 2004 ಎಸ್ಸಿ ಮತ್ತು ಎಸ್ಟಿ ಆಯೋಗದ ಮುಖ್ಯಸ್ಥರಾಗಿದ್ದರು. 2005 ರಿಂದ 2006 ಅವಧಿಯಲ್ಲಿ ವಸತಿ ಸಚಿವರಾಗಿದ್ದರು.
ಅಂಜನಮೂರ್ತಿ ಅವರು ಶಿರೋಮಣಿ ವಿಕಾಸ್ ಪ್ರಶಸ್ತಿ, ಮಾನವ ಸೇವಾ ಪುರಸ್ಕಾರ, ವಿಶೇಷ ಸ್ಕ್ರಾಲ್ ಆಫ್ ಹಾನರ್, ಇಂಟರ್ನ್ಯಾಶನಲ್ನಿಂದ ಎಕ್ಸಲೆನ್ಸ್-94 ಪ್ರಶಸ್ತಿಗೆ ಭಾಜನರಾಗಿದ್ದರು.
2008 ಮತ್ತು 2013ರ ವಿಧಾನಸಭಾ ಚುನಾವಣೆಯಲ್ಲಿ ಅಂಜನಮೂರ್ತಿ ಅವರು ಸೋಲನುಭವಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಟಿಕೆಟ್ ಆಕಾಂಕ್ಷಿಯಾಗಿದ್ದ ಅಂಜನಮೂರ್ತಿ ಪ್ರಸ್ತುತ ದಿನಮಾನಗಳಲ್ಲಿ ನಡೆಯುತ್ತಿರುವ ನೆಲಮಂಗಲ ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆಯ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದರು.