- ‘ರಾಜ್ಯ ಸರ್ಕಾರ ಕೇಳುವ ದರ ನೀಡಲು ಒಪ್ಪಿದರೆ ತುಪ್ಪ ಪೂರೈಸುತ್ತೇವೆ’
- ‘ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ?’
ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಅವರು, “ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ?” ಎಂದು ಕುಟುಕಿದ್ದಾರೆ.
“ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?
ನಳಿನ್ ಕುಮಾರ್ ಕಟೀಲ್ ಏನು ಟ್ವೀಟ್
“ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ” ಎಂದು ಕಟೀಲ್ ಟ್ವೀಟ್ ಮಾಡಿದ್ದರು.
