ಸರ್ಕಾರಿ ಅಸ್ಪತ್ರೆಗಳಲ್ಲಿ ಸರ್ಕಾರವು ಉಚಿತವಾಗಿ ರೋಗಿಗಳಿಗೆ ಪೂರೈಕೆ ಮಾಡುವ ಒಟ್ಟು 410 ಅಗತ್ಯ ಔಷಧಿಗಳ ಪೈಕಿ 190 ಔಷಧಿಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಏಪ್ರಿಲ್ ಮೊದಲ ವಾರದೊಳಗೆ ಎಲ್ಲ ಔಷಧಿಗಳು ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 190 ಅಗತ್ಯ ಔಷಧಿಗಳ ತೀವ್ರ ಕೊರತೆ ಇದೆ. ಟೆಂಡರ್ ಪ್ರಕ್ರಿಯೆ ನಡೆಸುವಲ್ಲಿನ ವಿಳಂಬದಿಂದಾಗಿ ಔಷಧಿಗಳ ಪೂರೈಕೆಯಲ್ಲಿ ತೊಡಕಾಗಿದೆ” ಎಂದು ಹೇಳಿದರು.
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಬಲಪಡಿಸಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ದೊರೆಯದ ಕಾರಣ ಔಷಧಾಲಯಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಲಭ್ಯವಿರುವ ಸುಮಾರು 222 ಕೋಟಿ ರೂ. ಹಣದಲ್ಲಿ ಅಗತ್ಯ ಔಷಧಿಗಳನ್ನು ಖರೀದಿಸಿ, ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಿಗೆ ಒದಗಿಸಲಾಗುತ್ತದೆ” ಎಂದು ತಿಳಿಸಿದರು.
“ಔಷಧಿಗಳ ಪೂರೈಕೆಗಾಗಿ ಎರಡು ವರ್ಷಗಳ ಅವಧಿಗೆ ಟೆಂಡರ್ ನೀಡಲು ಯೋಜಿಸಲಾಗಿದೆ” ಎಂದರು.