- ಜನಪರ ಕಾಳಜಿ ಇಲ್ಲದವರು ಆಕಸ್ಮಿಕವಾಗಿ ಒಮ್ಮೆ ಗೆಲ್ಲಬಹುದು ಅಷ್ಟೆ
- ಜ್ಞಾನ ದಾಹ, ಅಧ್ಯಯನಶೀಲತೆ ಬೆಳೆಸಿಕೊಳ್ಳಿ; ಶಾಸಕರಿಗೆ ಸಿಎಂ ಸಲಹೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್ – ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರಿಗೆ ಜೂನ್ 26 ರಿಂದ 28 ರವರೆಗೆ ಏರ್ಪಡಿಸಿರುವ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ” ಎಂದು ಕರೆ ನೀಡಿದರು.
“ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ದವಾಗಿ ಸದನದ ಮುಂದೆ ಮಂಡಿಸಬಹುದು” ಎಂದರು.
“ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ” ಎಂದರು.
ಕಾಯಕ-ದಾಸೋಹ ಬಜೆಟ್ನ ಪ್ರಮುಖ ಸಂಗತಿ
“ಶಾಸಕರು, ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ವಿವರಿಸಿದರು.

ನೂರು ಕುರಿ ಎಣಿಸಲು ಬಾರದವನು ಎಂದು ಟೀಕಿಸಿದ್ದರು
“ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ, ವಿಷಯ ತಜ್ಞರ ಜತೆ ನಿರಂತರವಾಗಿ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ “ದಿ ಹಿಂದು” ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ” ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು.
ಸಂವಿಧಾನ ಇಲ್ಲದಿದ್ದರೆ ಸಿ ಟಿ ರವಿ, ಈಶ್ವರಪ್ಪ ಶಾಸಕರಾಗುತ್ತಿರಲಿಲ್ಲ
“ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ ಟಿ ರವಿ, ಕೆ ಎಸ್ ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ” ಎಂದರು.
ವಾಟಾಳ್ ನಾಗರಾಜ್ ಮಾದರಿ
“ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಇಂದಿನಿಂದ ಮೂರು ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ
“224 ಶಾಸಕರುಗಳಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದವರು 70 ಮಂದಿ ಇದ್ದೀರಾ. ನೂತನ ಶಾಸಕರು ಬಂದೆ ಪುಟ್ಟ – ಹೋದೆ ಪುಟ್ಟ ಅಂತಾಗಬೇಡಿ. ಶಾಂತವೇರಿ ಗೋಪಾಲಗೌಡರನ್ನು ಇವತ್ತಿಗೂ ಇಡೀ ನಾಡು ಯಾಕೆ ಸ್ಮರಿಸುತ್ತದೆ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ರಾಜ್ಯದ ಮೊದಲ ಬಜೆಟ್ ಕೇವಲ 21 ಕೋಟಿ 3 ಲಕ್ಷ ರೂ. ಇತ್ತು. ಈಗಿನ ಬಜೆಟ್ 3 ಲಕ್ಷದ 9 ಸಾವಿರ ಕೋಟಿ ರೂ. ಆಗಿದೆ” ಎಂದು ಹೇಳಿದರು.
ವಿವಾದಕ್ಕೆ ಕಾರಣವಾಗಿದ್ದ ಅತಿಥಿಗಳ ಹೆಸರು
ನೂತನ ಶಾಸಕರಿಗೆ ಆಯೋಜಿಸಿರುವ ಮೂರು ದಿನಗಳ ತರಬೇತಿ ಶಿಬಿರಕ್ಕೆ ಸ್ಪೀಕರ್ ಯು ಟಿ ಖಾದರ್ ಅವರು ಆಹ್ವಾನ ನೀಡಿದ್ದ ಕೆಲವು ಅತಿಥಿಗಳ ಹೆಸರು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ಕೆಲವೊಂದು ಮಾರ್ಪಾಡುಗಳನ್ನು ಮಾಡಿದ ಬಳಿಕ ಶಿಬಿರಕ್ಕೆ ಚಾಲನೆ ಸಿಕ್ಕಿದೆ.
ಶಿಬಿರದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.