ನಕ್ಸಲಿಸಂನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಜ.10) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರು ‘ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದರು.
“ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಇದ್ದರೆ ಅವರು ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ” ಎಂದು ಮನವಿ ಮಾಡಿದರು.
ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ
“ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ. ಡಾ. ಅಂಬೇಡ್ಕರ್ ಅವರ ಕುರಿತ ಅಮಿತ್ ಶಾ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.
ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ
ನವದೆಹಲಿಯಲ್ಲಿ ಎಂಎಸ್ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, “ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ” ಎಂದು ಹೇಳಿದರು.
ಆಶಾ ಕಾರ್ಯಕರ್ತರಿಗೆ 10,000 ರೂ.
ಆಶಾ ಕಾರ್ಯಕರ್ತರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿ, “ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ” ಎಂದು ತಿಳಿಸಿದರು.
ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ
“ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು” ಎಂದರು.
ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, “ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ನ್ನು ನಾನೇ ನಿರಾಕರಿಸಿದ್ದೆ” ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.