ಉಭಯ ಸದನಗಳಲ್ಲಿ 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಈ ಮೂಲಕ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಚಾಲನೆ ಸಿಕ್ಕಂತಾಗಿದೆ.
2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ಸದನಗಳಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಂಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರವಾಗಿ ಬಂದಿದ್ದ ವಿಧೇಯಕವನ್ನು ಗುರುವಾರ ವಿಧಾನಪರಿಷತ್ಮಲ್ಲಿ ಅಧಿಕೃತವಾಗಿ ಅಂಗೀಕಾರಗೊಂಡಿದೆ.
ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿತ್ತು. ಈಗ ಉಭಯ ಸದನಗಳಲ್ಲಿ ತಿದ್ದುಪಡಿ ವಿಧೇಯಕ ಅಂಗೀಕಾರ ಆಗುವ ಮೂಲಕ ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ.
2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಇದೀಗ ಹಸಿರು ನಿಶಾನೆ ದೊರಕಿದೆ.
ಮಂಡ್ಯ ಕೃಷಿ ವಿಶ್ವವಿದ್ಯಾಲಯ: ನನ್ನ ಕನಸು ಸಾಕಾರಗೊಂಡ ಕ್ಷಣ!
“ಈ ದಿನ ನನ್ನ ಜೀವನದ ಅತ್ಯಂತ ಸಂಭ್ರಮದ ಕ್ಷಣ. ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳು 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ ನೀಡಿದ್ದು ನನಗೆ ಅಪಾರ ಹರ್ಷ ಮತ್ತು ಆನಂದವನ್ನು ಉಂಟುಮಾಡಿದೆ. ನನ್ನ ಜನ್ಮಭೂಮಿ, ನನ್ನ ಊರು ಮಂಡ್ಯ – ಕಾವೇರಿ ಜಲಾನಯನ ಪ್ರದೇಶದಲ್ಲಿ ಇರುವ ಈ ಪುಣ್ಯಭೂಮಿಯು ಕೃಷಿಕರ ಕಲ್ಪವೃಕ್ಷವಾಗಬೇಕು ಎಂಬುದು ನನ್ನ ಜೀವನದ ಮಹತ್ವದ ಕನಸಾಗಿತ್ತು. ಆ ಕನಸು ಇಂದು ನನಸಾಗುವ ಹಾದಿಯಲ್ಲಿ ಸಾಗುತ್ತಿದೆ” ಎಂದು ಸಚಿವ ಚಲುವರಾಯಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
“ಕೃಷಿ ಪರಂಪರೆಗೆ ಹೆಸರಾಗಿರುವ ನಮ್ಮ ಮಂಡ್ಯ ಜಿಲ್ಲೆಯಿಂದ ಪ್ರಪ್ರಥಮ ಬಾರಿಗೆ ಕೃಷಿ ಸಚಿವನಾಗಿ ಆಯ್ಕೆಯಾಗಿ ಇಂತಹ ಒಂದು ಸತ್ಕಾರ್ಯ ಮಾಡುವ ಸದವಕಾಶ ದೊರಕಿರುವುದು ನನ್ನ ಸೌಭಾಗ್ಯ. ನಾಡಿನ ಅನ್ನದಾತರ ಶ್ರೇಯೋಭಿವೃದ್ಧಿಗೆ ನನ್ನ ಶ್ರಮ ನಿರಂತರವಾಗಿರಲಿದೆ” ಎಂದಿದ್ದಾರೆ.