- ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತಿಗೆ ಎಚ್ಡಿಕೆ ತಿರುಗೇಟು
- ‘ಅವರ ಪಾಪದ ಹಣದಲ್ಲಿ ವಿದೇಶಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ’
ಇಲ್ಲಿ ಲೂಟಿ ಹೊಡೆಯಲು ನಮ್ಮನ್ನು ಬಿಟ್ಟುಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಚಲುವರಾಯಸ್ವಾಮಿ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಕಷ್ಟ ಅಲ್ಲವೇ? ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ವಿದೇಶಿ ಪ್ರವಾಸ ಮುಗಿಸಿ ಭಾನುವಾರ ರಾತ್ರಿ ವಾಪಸಾದ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ’ ಎಂದು ಹೇಳಿದ್ದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದರು.
“ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳಿದುಕೊಳ್ಳಲು ಹೋಗುತ್ತಿದ್ದೇನೆ” ಎಂದರು.
“ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಆರೇಳು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ, ನಮ್ಮ ಸರ್ಕಾರ ರಚನೆ: ಯತ್ನಾಳ್ ಭವಿಷ್ಯ
ರಾಜ್ಯಪಾಲರ ಬಳಿ ಏಕೆ ಹೋದರು?
“ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ” ಎಂದರು.
“ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡುತ್ತಿದ್ದಾರೆ ಇವರು. ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ?” ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.