ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್ ಅವರು ಬುಧವಾರ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಪುತ್ರಿ ಎಂ.ಪಿ ಲತಾ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು. ಬಳಿಕ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 70,194 ಮತಗಳನ್ನು ಪಡೆದು ಬಿಜೆಪಿಯ ಕರುಣಾಕರ ರೆಡ್ಡಿ ವಿರುದ್ಧ 13,845 ಮತಗಳ ಅಂತರದಲ್ಲಿ ಜಯ ಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎನ್ ಕೊಟ್ರೇಶ್ 44,988 ಮತಗಳನ್ನಷ್ಟೇ ಪಡೆದಿದ್ದರು.
ಇದೀಗ ಎಂ.ಪಿ ಲತಾ ಅವರು ಮರಳಿ ಕಾಂಗ್ರೆಸ್ಗೆ ಸೇರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸಿ ಜಯ ಗಳಿಸಿರುವ ಲತಾ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಿದೆ” ಎಂದು ತಿಳಿಸಿದ್ದಾರೆ.