108 ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಒಳಗೆ ಹೊಸ ರೂಪ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು, 108 ಆರೋಗ್ಯ ಸೇವೆ ಸುಧಾರಣೆಗೆ ಹಾಗೂ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಭೆಗೂ ಮುನ್ನ ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವೀಸ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು. ಕಾಲ್ ಸೆಂಟರ್ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಅವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು.
108 ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ? ಎಂದು ಅಧಿಕಾರಿಗಳನ್ನ ಪ್ರಶ್ನಿಸಿ, ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
2017ರಿಂದ 108 ಆರೋಗ್ಯವಾಹಿನಿ ಹೊಸ ಟೆಂಡರ್ ಕರೆದಿಲ್ಲ. ಈ ಹಿಂದೆ ಗುತ್ತಿಗೆ ಪಡೆದವರೇ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗರಂ ಆದ ಅವರು, 108 ಆರೋಗ್ಯ ವಾಹಿನಿ ಸೇವೆ ಜನರಿಗೆ ಸಮರ್ಪಕವಾಗಿ ತಲುಪಿಸಲು ಹೆಚ್ಚು ಗಮನ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
“ಮೂರು ತಿಂಗಳ ಒಳಗೆ ನನಗೆ ಉತ್ತಮ ಫಲಿತಾಂಶ ಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, “ಜನರು 108 ಆರೋಗ್ಯ ಸೇವೆ ಪಡೆಯಲು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾದರೆ ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ