ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್ ನಡೆಯುತ್ತಿದೆ. ಸಚಿವ ಕೆ.ಎನ್.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿ. ಈ ಹನಿಟ್ರ್ಯಾಪ್ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ” ಎಂದು ಆರೋಪಿಸಿದರು.
“ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು. ಸಚಿವ ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು. ಒಂದು ಕಡೆ ಕಾಂಗ್ರೆಸ್ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ. ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಒತ್ತಾಯಿಸಿದರು.
“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್ ಬಜೆಟ್ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಬಿಜೆಪಿಯಲ್ಲಿ ಯಾರೂ ಸಂಧಾನಕ್ಕೆ ಸಿದ್ಧವಿಲ್ಲ” ಎಂದರು.