- ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್ ಸವಾಲು
- ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ
ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಸಿದ್ದರಾಮಯ್ಯ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದ್ದು, “ಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಗೆಲುವು ಸುಲಭವಲ್ಲ” ಎಂದಿದ್ದಾರೆ.
“ಐದು ವರ್ಷಗಳ ಕಾಲ ಸಿಎಂ ಆಗಿದ್ದವರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನು ಯಾವುದೇ ಕಾರಣಕ್ಕೂ ಸಿಎಂ ಮಾಡಲ್ಲ. ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯರನ್ನು ಬಲಿಪಶು ಮಾಡಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.
ಮೀಸಲಾತಿ ಇವರಪ್ಪನ ಮನೆಯದ್ದಾ?
ಮೀಸಲಾತಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತ್ನಾಳ್, ಮುಸ್ಲಿಮರು ಮೂರು ಕಡೆಗಳಲ್ಲಿ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಮೀಸಲಾತಿ ಇವರಪ್ಪನ ಮನೆಯದ್ದಾ? ಮುಸ್ಲಿಮರಿಗೆ ಒಂದೇ ಕಡೆ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಇನ್ನೂ ಶೇ. 2 ರಷ್ಟು ಮೀಸಲಾತಿ ಹೆಚ್ಚು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದ್ದಾರೆ ಎಂದು ಪ್ರಶ್ನಿಸಿದಾಗ, “ಬಿಜೆಪಿಯ ಐತಿಹಾಸಿಕ ನಿರ್ಣಯದಿಂದ ಕಾಂಗ್ರೆಸ್ ಈಗ ಅಲುಗಾಡಿ ಹೋಗಿದೆ. ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಿ” ಎಂದು ಸವಾಲು ಹಾಕಿದ್ದಾರೆ.