“ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ನೀವು ಕೊಟ್ಟಿರುವ ಚರ್ಚೆಯ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ” ಎಂದು ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಈ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
“ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುತ್ತೇವೆ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ” ಎಂದು ತಿಳಿಸಿದರು.
ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ
ಎನ್ ಒಸಿ ನೀಡಲು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು. ನಾನು ಆ ವಿಚಾರ ಬಿಡುತ್ತೇನೆ. ಆದರೆ ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಯಡಿಯೂರಪ್ಪ, ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದು ಡಿ ಕೆ ಶಿವಕುಮಾರ್ ಕೇಳಿದರು.
ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ:
ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಕೇಳಿದಾಗ, “ರಾಹುಲ್ ಗಾಂಧಿ ಅವರು ನಾಳೆ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರು ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
