- ಮಾರ್ಗ ಮಧ್ಯೆ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸ್
- ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಪರಿಶಿಷ್ಟರ ಮೀಸಲಾತಿ ವಿಳಂಬ ಖಂಡಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ರಾಜಭವನ ಚಲೋ ಹೋರಾಟಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.
ಶುಕ್ರವಾರ ಮುಂಜಾನೆ ಹತ್ತುವರೆ ಸುಮಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಧರಣಿ ಆರಂಭಿಸಿದ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿದರು.
ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಘೋಷಿತ ಮೀಸಲಾತಿ ಹೆಚ್ಚಳದಲ್ಲಿ ಮುಂದಿನ ಕಾನೂನಾತ್ಮಕ ಕ್ರಮಗಳನ್ನೇ ಕೈಗೊಂಡಿಲ್ಲ. ಶೆಡ್ಯೂಲ್ 9ಕ್ಕೆ ಸೇರಿಸುವ ಪ್ರಸ್ತಾಪವನ್ನೇ ಕೇಂದ್ರದ ಎದುರು ಮಂಡಿಸದೆ ಮೋಸ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು.
ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ ಎನ್ನುವ ಕಾರಣಕ್ಕೆ ಗುರುವಾರ ರಾತ್ರಿ ಆತುರದಲ್ಲಿ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನ್ನು ಸರ್ಕಾರ ಈಗ ಸಲ್ಲಿಸಿದೆ. ಒಟ್ಟಾರೆ 24% ಹೆಚ್ಚಳಕ್ಕೆ ಮನವಿ ಮಾಡಿದೆ ಎಂದು ಶಿವಕುಮಾರ್ ಸರ್ಕಾರದ ವಿಳಂಬ ನೀತಿಯ ಬಗ್ಗೆ ಮಾಹಿತಿ ನೀಡಿದರು.
ಈ ಬೆಳವಣಿಗೆ ನಡುವೆ ತಮ್ಮ ಭೇಟಿಗೆ ಅವಕಾಶ ಕೇಳಿದ ಕಾಂಗ್ರೆಸ್ ನಾಯಕರ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಮಾಜಿ ಡಿಸಿಎಂ ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ ಹಿರಿಯ ಮುಖಂಡರ ನಿಯೋಗ ಇಂದು ಮಧ್ಯಾಹ್ನ 12 ಗಂಟೆಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಿದೆ.