ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯದ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವರೊಂದಿಗೆ ಸಭೆ ನಡೆಯಿತು.
ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಚವರೊಂದಿಗೆ ಸಭೆ ನಡೆಯಿತು.
ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ, “ಇಂದಿನ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನ ಕುರಿತಾಗಿ ಚರ್ಚಿಸಲಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗವು ಒಂದು ವಾರದೊಳಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ” ಎಂದು ಹೇಳಿದರು.
“ವರದಿಯ ವಿಷಯಗಳ ಬಗ್ಗೆ ಗಮನಿಸಿ ನಂತರ ಮತೊಂದು ಸಭೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುತ್ತದೆ. ಒಳಮೀಸಲಾತಿ ಅನುಷ್ಠಾನ ಮಾಡಲು ಸರ್ಕಾರ ಕಾರ್ಯಕ್ರಮ ರೂಪಿಸಲಿದೆ. ನಮ್ಮ ಮೂಲ ಉದ್ದೇಶವೇ ಐಕ್ಯತಾ ಸಮಾವೇಶದಲ್ಲಿ ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಳಮೀಸಲಾತಿ ಅನುಷ್ಠಾನ ಕುರಿತು ಘೋಷಿಸಿದ್ದು. ಅದರಂತೆಯೇ ನಮ್ಮ ಪಕ್ಷ ಹಾಗೂ ನಮ್ಮ ಸರ್ಕಾರ ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸುತ್ತದೆ” ಎಂದು ಭರವಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಿವರಾಜ್ ತಂಗಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.