ಒಳಜಗಳ, ಕೇಂದ್ರದ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಸಿದ್ದರಾಮಯ್ಯ ಆರೋಪ

Date:

Advertisements

ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿಯವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ” ಎಂದು ಟೀಕಿಸಿದ್ದಾರೆ.

“ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ವಿಧಾನ ಮಂಡಲದ ಅಧಿವೇಶನ ನಡೆಸುತ್ತಿರುವುದರ ಮುಖ್ಯ ಉದ್ದೇಶವೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಇಂತಹ ಚರ್ಚೆಗೆ ಅವಕಾಶವನ್ನೇ ಕೊಡದೆ ಇರುವ ರಾಜ್ಯದ ಬಿಜೆಪಿ ಶಾಸಕರು ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ರಾಜ್ಯ ಸರ್ಕಾರ ಶಕ್ತಿ ಮೀರಿ ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಬರ ಪರಿಹಾರಕ್ಕಾಗಿ. ರೂ.18,171 ಕೋಟಿ ನೆರವನ್ನು ಕೇಂದ್ರ ಸರ್ಕಾರದಿಂದ ಕೇಳಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಈ ನಷ್ಟಕ್ಕೆ ಪರಿಹಾರ ನೀಡಲು ರೂ.4,663 ಕೋಟಿ ಕೇಳಿದ್ದೇವೆ. ಸೆಪ್ಟಂಬರ್ 21 ರಂದು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಬಂದು ಸಮೀಕ್ಷೆ ನಡೆಸಿ, ವರದಿಯನ್ನೂ ಕೂಡಾ ನೀಡಿದೆ. ರಾಜ್ಯ ಸರ್ಕಾರದ ಮನವಿಗೆ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನಾವು ಬರೆದ ಪತ್ರಗಳಿಗೆ ಪ್ರತಿಕ್ರಿಯೆ ಇಲ್ಲ. ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಲು ಅವಕಾಶ ಕೇಳಿದರೂ ಕೊಟ್ಟಿಲ್ಲ” ಎಂದು ಹೇಳಿದ್ದಾರೆ.

“ಡಬಲ್ ಎಂಜಿನ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ತುಪ್ಪದ ಹೊಳೆ ಹರಿಯುತ್ತದೆ ಎಂಬ ಬಿಜೆಪಿ ನಾಯಕರ ಹಸಿ ಸುಳ್ಳುಗಳನ್ನು ನಂಬಿ ಕನ್ನಡಿಗರು 25 ಮಂದಿ ಬಿಜೆಪಿ ಸದಸ್ಯರನ್ನು ಲೋಕಸಭೆಗೆ ಕಳಿಸಿದ್ದರು. ಅವರು ಇಲ್ಲಿಯವರೆಗೆ ಲೋಕಸಭೆಯಲ್ಲಿ ತುಟಿ ಬಿಚ್ಚಿಲ್ಲ. ವಿಧಾನ ಮಂಡಲದಲ್ಲಿ ಬರಗಾಲದ ಚರ್ಚೆ ನಡೆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಈ ಅನ್ಯಾಯದ ವಿವರಗಳೆಲ್ಲವೂ ಹೊರಬಂದು ರಾಜ್ಯದ ಜನರ ಎದುರು ತಲೆತಗ್ಗಿಸುವಂತಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ಪಿಳ್ಳೆ ನೆಪಗಳನ್ನು ಮುಂದಿಟ್ಟು ರಾಜ್ಯದ ಬಿಜೆಪಿ ಶಾಸಕರು ಧರಣಿ ನಡೆಸಿ ಕಲಾಪ ನಡೆಯದಂತೆ ತಡೆಯೊಡ್ಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಇದನ್ನೆಲ್ಲ ಗಮನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರಿಗೆ ಅವರ ಪಕ್ಷದ ಬಹುಸಂಖ್ಯಾತ ಶಾಸಕರ ಬೆಂಬಲವೇ ಇಲ್ಲ. ಪ್ರತಿದಿನ ಅವರದ್ದೇ ಪಕ್ಷದ ಶಾಸಕರು ಒಬ್ಬೊಬ್ಬರಾಗಿ ಅಶೋಕ್ ಅವರ ಮುಖಕ್ಕೆ ಮಂಗಳಾರತಿ ಎತ್ತುತ್ತಿದ್ದಾರೆ. ಯಾವ ಕುರ್ಚಿಯೂ ಸಿಕ್ಕಿಲ್ಲ ಎಂಬ ವೇದನೆಯಿಂದ ಕುದಿಯುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಂತಹವರು ಬಹಿರಂಗವಾಗಿ ಬಿ.ಎಸ್. ಯಡಿಯೂರಪ್ಪನವರಿಂದ ಹಿಡಿದು ಆರ್.ಅಶೋಕ್ ವರೆಗೆ ಎಲ್ಲರ ವಿರುದ್ದ ಹರಿಹಾಯುತ್ತಿದ್ದಾರೆ. ಇದನ್ನೆಲ್ಲ ಗಮನಿಸುತ್ತಿರುವ ರಾಜ್ಯದ ಜನತೆ ಬಿಜೆಪಿ ಶಾಸಕರಿಗೆ ಬೀದಿ ಬೀದಿಯಲ್ಲಿ ಛೀಮಾರಿ ಹಾಕುತ್ತಿದ್ದಾರೆ. ಇದರಿಂದ ಮುಖ ಎತ್ತಿಕೊಂಡು ಹೋಗಲಾಗದ ಬಿಜೆಪಿ ಶಾಸಕರು ರಾಜ್ಯದ ಜನರ ಗಮನ ಬೇರೆ ಕಡೆ ಸೆಳೆಯುವ ಉದ್ದೇಶದಿಂದ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಾತೆತ್ತಿದರೆ ದಮ್ಮು ತಾಖತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ವಿಧಾನ ಮಂಡಲದ ಕಲಾಪದಲ್ಲಿ ಭಾಗವಹಿಸುವ ಧೈರ ತೋರಬೇಕು. ವಿಧಾನಸಭಾ ಅಧಿವೇಶನವನ್ನು ಕರೆದಿರುವುದೇ ರಾಜ್ಯ ಸರ್ಕಾರದ ಆಡಳಿತದ ವಿಮರ್ಶೆಗೆ. ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡಬೇಕಾಗಿದೆ. ಆ ದಮ್ಮು ತಾಖತ್ ಬಿಜೆಪಿ ಶಾಸಕರಿಗೆ ಇಲ್ಲ” ಎಂದಿದ್ದಾರೆ.

“ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿರೋಧ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತವೆ. ನಮ್ಮ ರಾಜ್ಯದಲ್ಲಿ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರಂತೆ ನಾವೇನು ವಿರೋಧ ಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕು” ಎಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X