- ಜನರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸೂಚನೆ ನೀಡಿದ ಸಿಎಂ
- ಜನತಾ ದರ್ಶನದ ಸ್ಥಳ, ವೇಳೆಯ ವಿವರಗಳನ್ನು ಜಾಹೀರಾತಿನ ಮೂಲಕ ಜನರಿಗೆ ನೀಡಲು ಸುತ್ತೋಲೆ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೆ. 25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳ ಜತೆ ನಡೆಸಿದ ಸಭೆಯಲ್ಲಿ, ಜಿಲ್ಲಾ ಮಟ್ಟದಲ್ಲೂ ಸಾರ್ವಜನಿಕ ಕುಂದುಕೊರತೆ ಕೇಳುವ, ಸಾರ್ವಜನಿಕ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಇಂದು (ಸೆ.16) ಸುತ್ತೋಲೆ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಶೀಘ್ರವೇ ಸಮನ್ವಯ ಸಾಧಿಸಿಕೊಂಡು, ಸೆ.25ರಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷಗಳನ್ನು ಸಿದ್ಧಪಡಿಸಿ, ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು, ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳುವಂತೆಯೂ ತಿಳಿಸಲಾಗಿದೆ.
ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲ ಅರ್ಜಿ, ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ (IPGRS -integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸಬೇಕು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗರೂಕತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಹಾಗೂ ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸುವಂತೆ ತಿಳಿಸಲಾಗಿದೆ.
ಸೆಪ್ಟಂಬರ್ ೧೯, ೨೦೨೨ರಂದು ತಿ ನರಸೀಪುರ ತಾಲ್ಲೂಕಿನ ತಾಲ್ಲೂಕು ಕಾರ್ಯಾಲಯದಲ್ಲಿ ದಸಂಸ (ಬಣರಹಿತ) ಅಹೋರಾತ್ರಿ ಪ್ರತಿಭಟನೆ ದಲಿತರಿಗೆ ಮೀಸಲಿಟ್ಟ ಸ್ಮಶಾಣ, ನಿವೇಶನ ಹಂಚಿಕೆ ಹಕ್ಕುಪತ್ರ ವಿತರಿಸದ ತಮ್ಮ ಬೇಡಿಕೆಗಳನ್ನ ಈಡೇರಿಸುವುದಾಗಿಯೂ ತಿಳಿಸಿದ ತಹಸೀಲ್ದಾರ್ ಹಾಗೂ ಇದರ ಬಗ್ಗೆ ಪದೇ ಪದೇ ಪ್ರತಿಭಟಿಸಿದ ಮತ್ತು ಬಗೆಹರಿಸಲು ಮಾನ್ಯ ಜಿಲ್ಲಾಧಿಕಾರಿಗಳು ಫೆಭ್ರವರಿ ೨೧, ೨೦೨೩ರಂದು ತಾಲ್ಲೂಕಾದಧಿಕಾರಿಗಳಿಗೆ ತಾಕೀತು ಮಾಡಿದರೂ ಪ್ರಯೋಜನವಾಗದ “ಜನತಾದರ್ಶನ” ಕೇವಲ ಅರ್ಜಿ ಸ್ವೀಕರಸಲಷ್ಟೆ ಸೀಮಿತ. ಕಾರ್ಯರೂಪಕ್ಕೆ ಬರುವುದು ಉಳ್ಳವರ, ಬಲಾಡ್ಯರ ಅರ್ಜಿಗಳು ಮಾತ್ರ.. ೧೦ ವರ್ಷಗಳಿಗೂ ಹಿಂದಿನಿಂದ ಈ ಹೋರಾಟ ಸಾಗುತ್ತಲೆ ಇದೆ..