ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯರಿಂದ ‘ಜನತಾ ದರ್ಶನ’: ಬೃಹತ್ ಸಂಖ್ಯೆಯಲ್ಲಿ ಜನರ ಆಗಮನ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಇಂದು(ನ.27) ಬೆಳಗ್ಗೆ 9.30ರಿಂದ ಇಡೀ ದಿನ ಗೃಹ ಕಚೇರಿ ಕೃಷ್ಣಾದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದ ಮೂಲೆಮೂಲೆಗಳಿಂದ ಬೃಹತ್ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ.

ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿಯ ಜನತಾ ದರ್ಶನ ಇದಾಗಿರುವುದರಿಂದ, ಸಕಲ ಮುನ್ನೆಚ್ಚರಿಕೆಗಳೊಂದಿಗೆ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನು ಹಾಜರಿರುವಂತೆ ಸಿಎಂ ಕಚೇರಿ ಸೂಚಿಸಿದೆ. ಸಾರ್ವಜನಿಕರು ಹೆಚ್ಚು ಹೊತ್ತು ಸರತಿ ಸಾಲುಗಳಲ್ಲಿ ನಿಲ್ಲದಂತೆ ಮಾಡಲು 20 ಕೌಂಟರ್‌ಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ನೆರಳಿಗೆ ಟೆಂಟ್ ವ್ಯವಸ್ಥೆ, ನೂಕು ನುಗ್ಗಲು ಆಗದಂತೆ ಬ್ಯಾರಿಕೇಡ್ ವ್ಯವಸ್ಥೆಯನ್ನೂ ಕೂಡ ಕಲ್ಪಿಸಲಾಗಿದೆ.

Advertisements

ವೃದ್ಧರು ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್‌ಗಳನ್ನು ಕೂಡ ತೆರೆಯಲಾಗಿದ್ದು, ಜತೆಗೆ ‘ಕೃಷ್ಣಾ’ ಸುತ್ತಮುತ್ತಲೂ ಜನರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ ಸ್ಪಂದನೆ ಬೆಳಗ್ಗೆಯಿಂದಲೇ ಅಹವಾಲು ಹಿಡಿದು ಜನ ನೆರೆದಿದ್ದು, ಎಲ್ಲ ವ್ಯವಸ್ಥೆಯನ್ನು ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಅರುಣ್ ಫುರ್ಟಾಡೊ ಮತ್ತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೋನರೆಡ್ಡಿ ಪರಿಶೀಲನೆ ನಡೆಸಿದರು.

ಇಲಾಖಾ ಮುಖ್ಯಸ್ಥರ ಕಡ್ಡಾಯ ಹಾಜರಿಗೆ ಸೂಚನೆ

ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ, ಉಪವಿಭಾಗ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಆನ್‌ಲೈನ್‌ನಲ್ಲೂ ಅಹವಾಲು ಸಲ್ಲಿಕೆಗೆ ಅವಕಾಶ

ಸಾರ್ವಜನಿಕರು ದೂರು ಅಥವಾ ಅಹವಾಲು ಸಲ್ಲಿಕೆ ಮಾಡುವ ವ್ಯವಸ್ಥೆ ಸರಳೀಕರಣಗೊಳಿಸುವ ಸಲುವಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿಗಳ ಕಚೇರಿಯು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ ಆನ್‌ಲೈನ್ ಮೂಲಕ ದೂರು ಸಲ್ಲಿಸಬಹುದು. ಜತೆಗೆ 1902ಗೆ ಕರೆ ಮಾಡಿ ದೂರವಾಣಿ ಮೂಲಕವೂ ಅಹವಾಲು ಸಲ್ಲಿಸಬಹುದು.

ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮನ:

ಇಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಸುತ್ತಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಮಹಿಳೆಯರು, ವೃದ್ಧರು ಆಗಮಿಸಿ ಗೃಹ ಕಚೇರಿ ಕೃಷ್ಣಾ ಎದುರು ಜಮಾಯಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಸಿಎಂ ಆಗಮನಕ್ಕೆ ಕಾಯುತ್ತಿದ್ದಾರೆ.

ಅಹವಾಲು ಆಲಿಕೆಗೆ 1000 ಸಿಬ್ಬಂದಿ: ಭದ್ರತೆಗೆ 550 ಪೊಲೀಸ್‌ ನಿಯೋಜನೆ

ಜನಸ್ಪಂದನ ಕಾರ್ಯಕ್ರಮದ ಭದ್ರತೆಗೆ ಒಬ್ಬರು ಡಿಸಿಪಿ, ಮೂರು ಮಂದಿ ಎಸಿಪಿ, 10 ಮಂದಿ  ಇನ್ಸ್‌ಪೆಕ್ಟರ್, 15 ಮಂದಿ ಪಿಎಸ್‌ಐ, ಪಿಸಿ-ಗೃಹರಕ್ಷಕ ಸಿಬ್ಬಂದಿ ಸೇರಿದಂತೆ 550 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಜತೆಗೆ ಅಹವಾಲು ಸ್ವೀಕಾರ ಹಾಗೂ ಪರಿಶೀಲನೆಗೆ ವಿವಿಧ ಇಲಾಖೆಗಳಿಂದ 350 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಿಸಿದ್ದು, ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 1,000 ಸಿಬ್ಬಂದಿ ಕರ್ತವ್ಯದಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ.

ವೆಬ್‌ಸೈಟ್‌, ಫೋನ್‌ನಲ್ಲೂ ಅಹವಾಲು ಸಲ್ಲಿಸಬಹುದು

ಜನತಾದರ್ಶನ ಕುರಿತು ಹೆಚ್ಚಿನ ಮಾಹಿತಿಗೆ https://ipgrs.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ದೂರು ಸಲ್ಲಿಸಲು ಸಹಾಯವಾಣಿ: 1902ಯನ್ನು ಸಂಪರ್ಕಿಸಬಹುದು.

ಆಧಾರ್ ಕಾರ್ಡ್, ಪಡಿತರ ಚೀಟಿ ತರಲು ಸೂಚನೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ಕಡ್ಡಾಯವಾಗಿ ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X