ಕಲ್ಲಡ್ಕ ಪ್ರಭಾಕರ್ ಭಟ್ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.
ಕಲ್ಲಡ್ಕ ಭಟ್ಗೆ ಕಳೆದ ತಿಂಗಳು ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ದೂರುದಾರೆ ನಜ್ಮಾ ನಝೀರ್ ಅರ್ಜಿ ಸಲ್ಲಿಸಿದ್ದಾರೆ. ನಜ್ಮಾ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದ್ದಾರೆ.
“ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ. ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾನೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹ” ಎಂದು ಕಾನೂನು, ಕಾಯ್ದೆಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ.
“ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ದೇಶ ಒಡೆಯುವ ಸಂಘಟಿತ ಕೃತ್ಯ ಮಾಡಿದ್ದಾನೆ. ಆ ಕಾರಣಕ್ಕಾಗಿ ಆತನ ವಿರುದ್ದ ಹೆಚ್ಚುವರಿಯಾಗಿ ಕೋಕಾ ಅ್ಯಕ್ಟ್ ಮತ್ತು ಯುಎಪಿಎ ಅ್ಯಕ್ಟ್, ಟೆರರಿಸ್ಟ್ ಅ್ಯಕ್ಟ್ ಗಳನ್ನು ಸೇರಿಸಬೇಕಿದೆ. ಆದ್ದರಿಂದ ಆರೋಪಿ ಪೊಲೀಸ್ ಕಸ್ಟಡಿಗೆ ಬೇಕಾಗಿದ್ದಾನೆ. ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟ ಹೇಳಿರುವ ಹೇಳಿಕೆಯನ್ನು ಆತನಿಂದ ದೃಢಪಡಿಸಿಕೊಂಡು, ಹೇಳಿಕೆಯ ಮಾದರಿ ಪಡೆದುಕೊಂಡು ಫೊರೆನ್ಸಿಕ್ ಲ್ಯಾಬ್ ಗೆ ಕಳಿಸಬೇಕಿದೆ. ಆರೋಪಿ ಮೇಲೆ ರೌಡಿ ಹಾಳೆ ತೆರೆಯಲು ಎಲ್ಲ ಆಧಾರಗಳಿದ್ದು, ಇವುಗಳ ಹಿನ್ನಲೆಯಲ್ಲಿ ಆರೋಪಿಯನ್ನು ತನಿಖೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನು ನಿರಾಕರಿಸಬೇಕು” ಎಂದು ವಾದ ಮಂಡಿಸಿದರು.
ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರು ಮತ್ತು ಸರ್ಕಾರಿ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಜನವರಿ 17ಕ್ಕೆ ಕಾಯ್ದಿರಿಸಿದೆ.