- ನೇರ ನೇಮಕಾತಿ, ಬಡ್ತಿ ಮೂಲಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ
- ಕಲ್ಯಾಣ ಕರ್ನಾಟಕ ಭಾಗದಲ್ಲಿ 28,023 ಹುದ್ದೆಗಳ ಭರ್ತಿ ಮಾಡಬೇಕಿದೆ
ಕಲ್ಯಾಣ ಕರ್ನಾಟಕ ಪ್ರದೇಶದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಎಲ್ಲ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಪತ್ರದಲ್ಲಿ ಕೋರಿದ್ದಾರೆ.
2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ
ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟದ ಎಲ್ಲ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರಲ್ಲದೆ, ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.