ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಸವರಾಜ ರಾಯರೆಡ್ಡಿ, ನನ್ನು ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪು ಅರ್ಥ ಬರುವ ರೀತಿ ಬಿಂಬಿಸಲಾಗಿದೆ. ನಾನು ಅಂತಹ ಆರೋಪ ಮಾಡಿಲ್ಲ ಎಂದು ಹೇಳಿದ್ದಾರೆ.
ವರದಿಗಳ ಕುರಿತು ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡಿರುವ ರಾಯರೆಡ್ಡಿ, “ಮೊದಲನೆಯದಾಗಿ ನಾನು ಸ್ಪಷ್ಟವಾಗಿ ಹೇಳುವುದೇನೆಂದರೆ, ಇದು ನನ್ನ ಪತ್ರಿಕಾ ಹೇಳಿಕೆಯಲ್ಲ. ನಾನು ಯಾವುದೇ ಪತ್ರಿಕಾಗೋಷ್ಠಿ ಮಾಡಿ ಇಂತಹ ಹೇಳಿಕೆ ನೀಡಿಲ್ಲ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದ ಮಾತುಗಳನ್ನು ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.
“ಮಂಗಳವಾರ, ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನಾ ನಿವಾರಣೆಗಾಗಿ ಡಿ.ಎಂ. ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಈ ವೇಳೆ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುವಾಗ, ‘ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟದ ಕೆಲಸ ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು 10 ವರ್ಷಗಳಲ್ಲಿಯೇ ಬಿದ್ದುಹೋಗುತ್ತಿವೆ. ಅದರಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಪೂರಕವಾಗುವಂತೆ ಸಮಿತಿಯು ತನ್ನ ವರದಿಯಲ್ಲಿ ನನ್ನ ಈ ಸಲಹೆಯನ್ನು ಉಲ್ಲೇಖಿಸಿಯೇ ಶಿಫಾರಸ್ಸುಗಳನ್ನು ಮಾಡಬೇಕೆಂದು’ ನಾನು ಹೇಳಿದ್ದೆ. ಆದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಮಾಧ್ಯಮಗಳಲ್ಲಿ ಹಾಲಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೇನೆಂದು ಸುದ್ದಿಯಾಗಿದೆ. ಇದು ಸಂಪೂರ್ಣ ಸುಳ್ಳು” ಎಂದು ಹೇಳಿದ್ದಾರೆ.
“ಭ್ರಷ್ಟಾಚಾರದ ಪಿಡುಗು ಈ ಹಿಂದಿನ ಬಿಜೆಪಿ ಸರ್ಕಾರದ ಬಹುದೊಡ್ಡ ಕೊಡುಗೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸರ್ಕಾರದ ಎಲ್ಲ ತೆರಿಗೆ ಸಂಗ್ರಹಣಾ ಇಲಾಖೆಗಳಲ್ಲಿರುವ (ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆ) ಗ್ರೂಪ್ ‘ಬಿ’ ಮತ್ತು ‘ಸಿ’ ದರ್ಜೆಯ ಹುದ್ದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲಾಗುವುದೆಂದು ಈಗಾಗಲೇ 2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ. ಈ ನಿರ್ಧಾರವು ನಮ್ಮ ಸರ್ಕಾರದ ಭ್ರಷ್ಟಾಚಾರ ವಿರೋಧಿ ನೀತಿಗೆ ಕನ್ನಡಿ ಹಿಡಿದಂತಿದೆ” ಎಂದು ರಾಯರೆಡ್ಡಿ ಹೇಳಿಕೊಂಡಿದ್ದಾರೆ.
“ಅಧಿಕಾರದಲ್ಲಿದ್ದಾಗ ಜನಸೇವೆಗೆ ಬದಲಾಗಿ ಭ್ರಷ್ಟಾಚಾರದಲ್ಲಿಯೇ ಮುಳುಗಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕು ಇಲ್ಲ” ಎಂದಿದ್ದಾರೆ.