- ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆ
- ಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ
ಎಸ್ಡಿಎಲ್ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಸೋಮವಾರ ರಾತ್ರಿ 9.47ಕ್ಕೆ ಹಾಜರುಪಡಿಸಿದರು.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು.
ಚನ್ನಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಭಾಗವಹಿಸಿದ್ದರು.
ಅಲ್ಲಿರುವಾಗಲೇ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿತ್ತು. ಬಳಿಕ ಕಾರ್ಯಕ್ರಮದಿಂದ ತೆರಳಿದ ಅವರು ಅಲ್ಲಿಂದ ನಾಪತ್ತೆಯಾಗಿದ್ದಾರೆಂದು ಸುದ್ದಿಗಳು ಹರಿದಾಡಿತ್ತು.
ನಂತರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿರೂಪಾಕ್ಷಪ್ಪರನ್ನು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿ ಲೋಕಾಯುಕ್ತ ಕಚೇರಿಗೆ ಕರೆದುಕೊಂಡು ಬಂದರು.
ಲೋಕಾಯುಕ್ತ ಕಚೇರಿಗೆ ಕರೆತರುವ ಮುನ್ನ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಆರೋಗ್ಯ ತಪಾಸಣೆ ಸಲುವಾಗಿ ಕೆ ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ, ತಕ್ಷಣಕ್ಕೆ ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಅಲ್ಲಿಂದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಈ ಸುದ್ದಿ ಓದಿದ್ದೀರಾ? :ಕೆಎಸ್ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಗ್ಯ ಪರಿಸ್ಥಿತಿ ಸಹಜವಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಬಂಧನವಾದ 24 ಗಂಟೆಯೊಳಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ತನಿಖಾಧಿಕಾರಿಗಳು ಹಾಜರುಪಡಿಸಬೇಕಿದೆ.
ಜೊತೆಗೆ ನ್ಯಾಯಾಧೀಶರು ಇಂದು ರಾತ್ರಿಯೇ ಒಪ್ಪಿದರೆ ಮಾಡಾಳ್ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದೆಂದು ತಿಳಿದುಬಂದಿದೆ.
ನ್ಯಾಯಾಧೀಶರು ಒಪ್ಪದಿದ್ದಲ್ಲಿ, ನ್ಯಾಯಾಲಯಕ್ಕೆ ಹಾಜರುಪಡಿಸಲು 24 ಗಂಟೆ ಸಮಯ ಇರುವುದರಿಂದ ಇಂದು ರಾತ್ರಿ ಲೋಕಾಯುಕ್ತ ಕಚೇರಿಯಲ್ಲಿ ಅಥವಾ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪರನ್ನು ಇರಿಸಲಾಗುವುದು.
ಮಂಗಳವಾರ ಬೆಳಿಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.