- ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
- ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು
ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಯಾವುದೇ ಕ್ಷಣದಲ್ಲಾದರೂ ಮಾಡಾಳು ವಿರೂಪಾಕ್ಷಪ್ಪ ಬಂಧನವಾಗುವ ಸಾಧ್ಯತೆ ಇದೆ.
ಕಳೆದ ತಿಂಗಳು ಬಿಜೆಪಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಬೆಂಗಳೂರಿನ ಕಚೇರಿಗೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ರೂ ಲಂಚ ಪಡೆಯುತ್ತಿದ್ದ ಶಾಸಕರ ಪುತ್ರ ಮಾಡಾಳು ಪ್ರಶಾಂತ ಅವರನ್ನು ಬಂಧಿಸಿದ್ದಲ್ಲದೇ, ಮನೆ ಮೇಲೂ ದಾಳಿ ಮಾಡಿ, 6 ಕೋಟಿ ರೂ. ವಶಪಡಿಸಿಕೊಂಡಿದ್ದರು.
ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಶಾಸಕ ಸೇರಿದಂತೆ ಇತರೆ 6 ಜನ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಬಂಧನದ ಭೀತಿ ಎದುರಾಗಿದ್ದ ಶಾಸಕರು ನಾಪತ್ತೆಯಾಗಿ ಅಜ್ಞಾತ ಸ್ಥಳದಲ್ಲಿದ್ದುಕೊಂಡು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ಮೀಸಲಾತಿ ರದ್ದು ಖಂಡಿಸಿ ಕಾನೂನು ಹೋರಾಟಕ್ಕೆ ಮುಸ್ಲಿಂ ಸಮುದಾಯ ಸಜ್ಜು
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠವು ಕೆಲವು ಷರತ್ತುಗಳೊಂದಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.
ಲೋಕಾಯುಕ್ತ ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಶಾಸಕರಿಗೆ ನೀಡಿದ್ದ ಜಾಮೀನನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.