“ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆಯನ್ನು ಹೆಚ್ಚಿಸಿ ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡುವುದೇ ಈ ಸಿರಿಧಾನ್ಯ ರಫ್ತಿನ ಮೂಲ ಉದ್ದೇಶ” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗು ರಫ್ತುದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಿರಿಧಾನ್ಯವನ್ನು ಇಡೀ ವಿಶ್ವವೇ ಮೆಚ್ಚುವಂತೆ ಮಾಡಿದೆ” ಎಂದರು.
“ರಾಜ್ಯದಲ್ಲಿ ವಿಶೇಷವಾಗಿ ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಬೆಳೆದ ಸಿರಿಧಾನ್ಯಗಳನ್ನು ರಫ್ತು ಮಾಡಲಾಗುತ್ತಿದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಸರಕಾರ ಸಂಕಲ್ಪ ಮಾಡಿದೆ. ಅದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು” ಎಂದರು.
“ಸಿರಿಧಾನ್ಯ ಬೇಡಿಕೆಯಲ್ಲಿರುವ ರಾಗಿ, ಸಾಮೆ, ಉದ್ದು, ನವಣೆ ಮುಂತಾದ ಸಿರಿಧಾನ್ಯಗಳನ್ನು ಮೊದಲು ಯಥೇಚ್ಛವಾಗಿ ಬೆಳೆಯಲಾಗುತ್ತಿತ್ತು. ಇಂದಿನ ಆಧುನಿಕ ಜೀವನದಲ್ಲಿ ಜನ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.
“ಸಾವಯವ ಹಾಗೂ ಸಿರಿಧಾನ್ಯಗಳ ಬಳಕೆಯು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು ಇವುಗಳ ಉತ್ಪಾದನೆಯನ್ನು ಹೆಚ್ಚಿಸಲು ಹೆಚ್ಚು ಒತ್ತು ನೀಡಬೇಕಾಗಿದೆ. ಸಿರಿಧಾನ್ಯಗಳ ಬಳಕೆ ಹಾಗೂ ಉತ್ಪಾದನೆ ಕುರಿತಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳಿಗೆ ಜಗತ್ತಿನಾದ್ಯಂತ ಹೆಚ್ಚಿನ ಬೇಡಿಕೆಯಿದೆ. ಸಿರಿಧಾನ್ಯ ಹಾಗೂ ಸಾವಯವ ಕೃಷಿ ಪದ್ಧತಿ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲು ಮೇಳ ಸಹಕಾರಿಯಾಗಲಿದೆ” ಎಂದು ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಿಸಿದರು.
ಇದನ್ನು ಓದಿದ್ದೀರಾ? ಜನವರಿ 5 ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ
“ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು. ಈ ಕುರಿತು ಇಲಾಖೆಯಿಂದ ರೈತರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ತಿಳಿವಳಿಕೆ ನೀಡಲಾಗುವುದು” ಎಂದು ತಿಳಿಸಿದರು.
ಸಿರಿಧಾನ್ಯ ಮತ್ತು ಸಾವಯವ ಆಹಾರ ಪದ್ಧತಿಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿರುವುದು ಸಂತೋಷದ ವಿಚಾರ. 20ನೇ ವಯಸ್ಸಿನಿಂದಲೇ ಸಿರಿ ಧಾನ್ಯವನ್ನು ಉಪಯೋಗಿಸುವುದರಿಂದ ಆರೋಗ್ಯದ ಬಗ್ಗೆ ಇನ್ನು ಹೆಚ್ಚಿನ ಕಾಳಜಿ ವಹಿಸಬಹುದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.