- ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟ ಜನಪ್ರತಿನಿಧಿಗಳು
- ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಾಂತ್ರಿಕ ತಂಡ ರಚನೆ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಎಕ್ಸ್ಪ್ರೆಸ್ ಹೈವೇಯಲ್ಲಿ ನಿತ್ಯ ಸಂಭವಿಸುತ್ತಿರುವ ಅಪಘಾತಗಳು, ಆಗಬೇಕಾದ ಕೆಲಸಗಳು, ಮೂಲ ಸೌಕರ್ಯಗಳು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಸುದೀರ್ಘ ಚರ್ಚೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಈ ವೇಳೆ ಹಲವು ವಿಷಯಗಳನ್ನು ಶಾಸಕರು ಸೇರಿದಂತೆ ಸಚಿವರು ಸಭೆಯ ಗಮನಕ್ಕೆ ತಂದರು. ಅಲ್ಲದೆ, ಸಮಸ್ಯೆಗಳ ಶೀಘ್ರ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ.
ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ, “ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹತ್ತು ಹಲವು ಸಮಸ್ಯೆಗಳು ಕಂಡು ಬರುತ್ತಿದ್ದು, ಅವುಗಳನ್ನು ಮಾಧ್ಯಮಗಳು ವರದಿ ಮಾಡುತ್ತಿವೆ. ಸಾರ್ವಜನಿಕರು, ಜನಪ್ರತಿನಿಧಿಗಳು ಈ ಬಗ್ಗೆ ಧ್ವನಿ ಎತ್ತುತ್ತಲೇ ಇದ್ದಾರೆ. ಆದರೆ, ಇದರ ಬಗ್ಗೆ ಇನ್ನೂ ನಿರಾಸಕ್ತಿ ವಹಿಸಲಾಗಿದೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು” ಎಂದು ಸೂಚಿಸಿದರು.
“ಅಪಘಾತಗಳು ಹೆಚ್ಚಳವಾಗುವುದಕ್ಕೆ ಕಾರಣಗಳೇನು? ಯಾವ್ಯಾವ ಸ್ಥಳಗಳಲ್ಲಿ ಹೆಚ್ಚಿನ ಅಪಘಾತ ಸಂಭವಿಸುತ್ತದೆ? ಮಳೆಗಾಲದಲ್ಲಿ ನೀರು ರಸ್ತೆಗಳಲ್ಲೇ ನಿಲ್ಲುತ್ತಿದೆ. ಇದಕ್ಕೆ ಕಾರಣವೇನು? ಸರ್ವೀಸ್ ರಸ್ತೆಯಲ್ಲೂ ಸಹ ನೀರು ನಿಲ್ಲುತ್ತಿದೆ. ಇವು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಲಿದೆ. ಇದಕ್ಕೇನು ಪರಿಹಾರ ಕ್ರಮವನ್ನು ಕೈಗೊಂಡಿದ್ದೀರಿ? ಹೈವೇಯಲ್ಲಿ ಹಾಕಿರುವ ರಸ್ತೆ ದೀಪಗಳು ಹಾಳಾಗಿದ್ದು, ರಾತ್ರಿ ವೇಳೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಅಂಡರ್ಪಾಸ್ಗಳಲ್ಲಿ ಅನೇಕ ಸಮಸ್ಯೆಗಳಿವೆ. ಚೈನ್ಲಿಂಕ್ ಸರಿಯಾಗಿ ಆಗಿಲ್ಲ, ಪಾರ್ಕಿಂಗ್ ಸಮಸ್ಯೆ ಇದೆ. ಎಲೆಕ್ಟ್ರಿಕ್ ಪೋಲ್ಗಳ ಸಮಸ್ಯೆ ಇದೆ. ಆಂಬುಲೆನ್ಸ್ಗಳ ವ್ಯವಸ್ಥೆ ಇಲ್ಲ. ಇರುವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಕೈ ವಾಕ್ಗಳ ನಿರ್ಮಾಣ ಬಾಕಿ ಇದೆ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕಾಮಗಾರಿಯೇ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಏಕೆ?
“ರಾಷ್ಟ್ರೀಯ ಹೆದ್ದಾರಿಯನ್ನು ಪ್ರಾರಂಭಿಸಿದಾಗ ಅಗ್ರಿಮೆಂಟ್ನಲ್ಲಿ ಕಂಡೀಶನ್ ಏನಿತ್ತು? ರಾಷ್ಟೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಡಿಎ) ಮತ್ತು ಡಿಎಲ್ವಿ ಸಂಸ್ಥೆಯ ನಡುವೆ ಆಗಿರುವ ಒಪ್ಪಂದದ ಪ್ರಕಾರವಾಗಿ ರಸ್ತೆ ಕಾಮಗಾರಿ ನಡೆಯುತ್ತಿದೆಯೇ? ರಸ್ತೆ ಕಾಮಗಾರಿ ಸಂಪೂರ್ಣಗೊಳ್ಳದೇ ಟೋಲ್ ಸಂಗ್ರಹ ಮಾಡುತ್ತಿರುವುದು ಏಕೆ? ಕಾಮಗಾರಿ ಪೂರ್ಣಗೊಂಡ ಮೇಲೆ ಟೋಲ್ ಸಂಗ್ರಹ ಮಾಡಬೇಕಲ್ಲವೇ?” ಎಂದು ಸಚಿವ ಚಲುವರಾಯಸ್ವಾಮಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಈ ಸುದ್ದಿ ಓದಿದ್ದೀರಾ? ಮಕ್ಕಳಿಗೆ ತಿಂಗಳಿಗೊಮ್ಮೆ ಸ್ಕೂಲ್ ಬ್ಯಾಗ್ ರಹಿತ ‘ಸಂಭ್ರಮದ ಶನಿವಾರ’ ಆಚರಿಸಲು ಸುರೇಶ್ ಕುಮಾರ್ ಸಲಹೆ
ತಾಂತ್ರಿಕ ತಂಡ ರಚನೆಗೆ ನಿರ್ಣಯ
ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ನಗರಗಳಲ್ಲಿ ಅನೇಕ ಸಮಸ್ಯೆಗಳಿವೆ. ಫುಟ್ಪಾತ್ ಸಮಸ್ಯೆಗಳಿವೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು ಆಗಬೇಕಿವೆ. ಇನ್ನೂ ಹಲವು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಈ ವೇಳೆ ಚರ್ಚೆ ನಡೆಸಿದರು. ಹಾಗೆಯೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಹೆದ್ದಾರಿ ಪ್ರಾಧಿಕಾರವು ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದು, ಒಂದು ತಾಂತ್ರಿಕ ತಂಡ ರಚನೆ ಮಾಡಿ, ಅದರಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿಯನ್ನು ಕೊಡಬೇಕೆಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಶಾಸಕರಾದ ಪಿ ಎಂ ನರೇಂದ್ರ ಸ್ವಾಮಿ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ರವಿಕುಮಾರ್ ಗಣಿಗ, ರಮೇಶ ಬಂಡಿ ಸಿದ್ದೇಗೌಡ ಹಾಗೂ ಸಂಸದೆ ಸುಮಲತಾ ಅಂಬರೀಷ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಡಿಬಿಎಲ್ ಬಿಲ್ಡರ್ ಪ್ರೈವೇಟ್ ಲಿಮಿಟೆಡ್ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.