- ಮೇ 22ರಿಂದ 24 ರವರೆಗೆ ವಿಧಾನಸಭೆ ಅಧಿವೇಶನ
- ಹಂಗಾಮಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಕಲಾಪ
ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಅಧಿವೇಶನವನ್ನು ಮೇ 22ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈ ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಕಾಲಾವಕಾಶ ಒದಗಿಸಿಕೊಡುವಂತೆ ಕೇಳಿಕೊಂಡಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಮೊದಲ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಈ ನಿರ್ಧಾರವನ್ನು ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ 22ರ ಸೋಮವಾರದಿಂದ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು ಎಂದರು.
ಹಂಗಾವಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ, ಇಲ್ಲಿ ನೂತನ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಾಗುವುದು. ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಹೊಸ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ಸುದ್ದಿ ಓದಿದ್ದೀರಾ?:ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಇಂದೇ ಜಾರಿಯಾಗಲಿವೆ : ರಾಹುಲ್ ಗಾಂಧಿ
ಇನ್ನು ಮೊದಲ ಸಚಿವ ಸಂಪುಟ ಸಭೆಯ ಬಗ್ಗೆ ಚುಟುಕು ಮಾಹಿತಿ ನೀಡಿದ ಸಿಎಂ, ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ.
ನಾವು ನೀಡಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಇದರಿಂದ ಹಿಂದೆ ಸರಿಯುವುದಿಲ್ಲ. ಕಟ್ಟುನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು ಎಂದರು.