2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಂಚೆ ಅಭಿಯಾನ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಮತ್ತು ಕಾರ್ಯಕರ್ತರು ಮೈಸೂರಿನಲ್ಲಿ ಅಂಜೆ ಅಭಿಯಾನ ನಡೆಸಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಂಚೆ ಪತ್ರಗಳನ್ನು ಅಂಚೆ ಪಟ್ಟಿಗೆಗೆ ಹಾಕಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲೋಕೇಶ್ ಪಿಯಾ, “ಪ್ರತಾಪ್ ಸಿಂಹ ಸೋಲಿಸಲು ಯತೀಂದ್ರ ಸಿದ್ದರಾಮಯ್ಯ ಸೂಕ್ತ ಅಭ್ಯರ್ಥಿ. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಅಂಚೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.
“ಯತೀಂದ್ರ ಅವರನ್ನು ಎಲ್ಲ ಸಮುದಾಯದ ಜನರು ಇಷ್ಟಪಡುತ್ತಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬೇರೆ ಯಾರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟರು, ಅವರು ಗೆಲ್ಲುವುದಿಲ್ಲ. ಯತೀಂದ್ರಗೆ ಟಿಕೆಟ್ ಕೊಟ್ಟರೆ, ಖಂಡಿತ ಅವರು ಗೆಲುವು ಸಾಧಿಸುತ್ತಾರೆ. ಅವರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.