ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕಳೆದ 4 ದಿನಗಳ ಅಂತರದಲ್ಲಿ ರಾಜ್ಯ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕುಕಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎನ್ನಲಾದ 40 ಮಂದಿ ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬೀರೇನ್ ಸಿಂಗ್ ಹೇಳಿದ್ದಾರೆ.
ಬಂಧಿತ ಹಾಗೂ ಹತ್ಯೆಗೀಡಾದ ಉಗ್ರರ ಬಳಿಯಿಂದ ಎಕೆ 47, ಎಂ 16, ಸ್ನೈಪರ್ ರೈಫಲ್ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಪ್ರತಿಭಟನಾಕಾರರ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ರಾತ್ರಿಯಿಂದ ಮತ್ತೆ ಸಂಘರ್ಷ ಭುಗಿಲೆದ್ದಿದೆ. ಹಲವು ಸ್ಥಳಗಳಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ನಾಗರಿಕರು ಮತ್ತು ಓರ್ವ ಪ್ಯಾರಾ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ದಿನಗಳ ಭೇಟಿಗಾಗಿ ಮೇ 29 ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರಕ್ಕೆ ಆಗಮಿಸಲಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ.