- ವಿಚಾರಣೆಯ ವೇಳೆ ಮೋದಿ ಹೆಸರು ಹೇಳುವಂತೆ ನನ್ನ ಮೇಲೆ ಸಿಬಿಐ ತೀವ್ರ ಒತ್ತಡ ಹಾಕಲಾಗಿತ್ತು
- ರಾಹುಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಆರೋಪ ಮಾಡ್ತಿದಾರೆ
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್ನಲ್ಲಿ ನಡೆದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ʻಗುಜರಾತ್ ಸಿಂಎಂ ಆಗಿದ್ದ ವೇಳೆ ನನ್ನನ್ನು ಜೈಲಿಗೆ ಅಟ್ಟಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗಿತ್ತುʼ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬೆನ್ನಲ್ಲೇ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಗುಜರಾತ್ನಲ್ಲಿ ನಡೆದ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ನಾನು ಆರೋಪಿಯಾಗಿದ್ದೆ. ವಿಚಾರಣೆಯ ವೇಳೆ ಮೋದಿಯ ಹೆಸರು ಹೇಳಿದರೆ ನನ್ನನ್ನು ಬಿಡುಗಡೆ ಮಾಡುವುದಾಗಿ ಸಿಬಿಐ ಅಧಿಕಾರಿಗಳು ಹೇಳಿದ್ದರು. ಅಧಿಕಾರಿಗಳ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಾಗಿ ಆಗಿನ ಗುಜರಾತ್ ಸಿಎಂ ಮೋದಿ ಹೆಸರು ಹೇಳುವಂತೆ ನನ್ನ ಮೇಲೆ ತೀವ್ರ ಒತ್ತಡ ಹಾಕಲಾಗಿತ್ತು. ಆದರೆ ನಾನು ಅದನ್ನು ನಿರಾಕರಿಸಿದ ಪರಿಣಾಮ ಜೈಲು ಪಾಲಾಗಿದ್ದೆʼ ಎಂದು ‘ನ್ಯೂಸ್ 18 ರೈಸಿಂಗ್ ಇಂಡಿಯಾ’ ಕಾರ್ಯಕ್ರಮದಲ್ಲಿ ಅಮಿತ್ ಶಾ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ರಾಜಕಾರಣದಲ್ಲಿ ಧರ್ಮ ಬಳಕೆ ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ: ಸುಪ್ರೀಂ ಕೋರ್ಟ್
ನರೇಂದ್ರ ಮೋದಿ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಶಾ, ಪ್ರತಿಪಕ್ಷ ನಾಯಕರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇರುವುದರಿಂದ ಏಜೆನ್ಸಿಗಳು ಕ್ರಮ ತೆಗೆದುಕೊಳ್ಳುತ್ತಿವೆ. ಕೇಜ್ರಿವಾಲ್ ಅವರು ತಾವು ಕ್ಲೀನ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಹಳ ಸಮಯದಿಂದ ಸತ್ಯೇಂದರ್ ಜೈನ್ ಮತ್ತು ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ. ಅವರು ನಿರಪರಾಧಿಗಳಾಗಿದ್ದರೆ, ಅವರಿಗೇಕೆ ಜಾಮೀನು ಸಿಗುತ್ತಿಲ್ಲ ಎಂದು ಶಾ ಉತ್ತರಿಸಿದ್ದಾರೆ.
ರಾಹುಲ್ ಗಾಂಧಿ ಅನರ್ಹತೆ ವಿಚಾರ ಕುರಿತು ಮಾತನಾಡಿದ ಶಾ, ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಉನ್ನತ ನ್ಯಾಯಾಲಯಕ್ಕೆ ಹೋಗುವ ಅವಕಾಶವಿದೆ. ಆದರೆ ನ್ಯಾಯಾಲಯದಲ್ಲಿ ಈ ವಿವಾದವನ್ನು ಬಗೆಹರಿಸಿಕೊಳ್ಳುವುದನ್ನು ಬಿಟ್ಟು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ 2013ರ ಸುಪ್ರೀಂಕೋರ್ಟ್ ಆದೇಶದಿಂದಾಗಿ, ಲಾಲು ಪ್ರಸಾದ್ ಯಾದವ್, ಜೆ. ಜಯಲಲಿತಾ ಮತ್ತು ರಶೀದ್ ಅಲ್ವಿ ಸೇರಿದಂತೆ 17 ಪ್ರಮುಖ ರಾಜಕೀಯ ನಾಯಕರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆದರೆ ಆಗ ಯಾರೂ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಿಲ್ಲ. ದೇಶದ ಕಾನೂನನ್ನು ಗೌರವಿಸುವುದು ಎಲ್ಲರ ಕರ್ತವ್ಯ. ಆದರೆ ರಾಹುಲ್ ಇದನ್ನು ಮರೆತಿದ್ದಾರೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.