ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿ
ಈ ಹಿಂದೆ ತುರ್ತು ನಿರ್ಗಮನ ದ್ವಾರ ತೆರೆಯಲೆತ್ನಿಸಿ ಸುದ್ದಿಯಾಗಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ವಿಮಾನಯಾನದ ವೇಳೆ ಕೆಲ ಪ್ರಯಾಣಿಕರು ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಈ ನಡುವೆ ಪ್ರಯಾಣಿಕನೊಬ್ಬ ಕುಡಿದ ಅಮಲಿನಲ್ಲಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ.
ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶದ ಕಾನ್ಪುರ ಮೂಲದ ಪ್ರತೀಕ್ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಇಂಡಿಗೊ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ ಈತ, ವಿಮಾನ ಹಾರಾಟದಲ್ಲಿದ್ದಾಗ ಕುಡಿದ ಮತ್ತಿನಲ್ಲಿ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದಾನೆ. ಪ್ರತೀಕ್ನ ಚಟುವಟಿಕೆಗಳನ್ನು ಗಮನಿಸಿದ ವಿಮಾನದ ಸಿಬ್ಬಂದಿ ಕೂಡಲೇ ಆತನನ್ನು ತಡೆದಿದ್ದಾರೆ.
“ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಆರೋಪಿಯನ್ನು ಭದ್ರತಾ ಸಿಬ್ಬಂದಿಯ ವಶಕ್ಕೆ ನೀಡಲಾಗಿದೆ. ಉಳಿದ ಪ್ರಯಾಣಿಕರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯ ವಿಚಾರದಲ್ಲಿ ಸಿಬ್ಬಂದಿ ಯಾವುದೇ ರೀತಿಯಲ್ಲೂ ರಾಜಿಯಾಗಿಲ್ಲ” ಎಂದು ಇಂಡಿಗೊ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಅದಾನಿ ಪರ ಮಾತನಾಡಿ ಅಚ್ಚರಿ ಮೂಡಿಸಿದ ಶರದ್ ಪವಾರ್
ಕೆಲ ತಿಂಗಳುಗಳ ಹಿಂದಷ್ಟೇ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಇದೇ ರೀತಿ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದರು ಎಂದು ವರದಿಯಾಗಿತ್ತು. ವಿಮಾನದಲ್ಲಿ ಸಹಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಮತ್ತು ಭದ್ರತಾ ನಿಮಯಗಳನ್ನು ಉಲ್ಲಂಘಿಸಿದ ಕಾರಣಕ್ಕೆ 2023ರ ಜನವರಿಯಿಂದ ಮಾರ್ಚ್ 15ರ ನಡುವೆ 10ಕ್ಕೂ ಜನರ ಮೇಲೆ ವಿಮಾಯಾನ ಸಚಿವಾಲಯ ನಿರ್ಬಂಧ ಹೇರಿದೆ. 2021ರಲ್ಲಿ 66 ಮತ್ತು 2022ರಲ್ಲಿ 63 ಜನರ ಮೇಲೆ ಇದೇ ರೀತಿ ನಿರ್ಬಂಧ ಹೇರಲಾಗಿತ್ತು.