- ರಾಹುಲ್ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಪ್ರತಿಭಟನೆ
- ಮುಂದಿನ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ
ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ರಾಹುಲ್ ಗಾಂಧಿ ಅನರ್ಹತೆಗಾಗಿ ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ (ಮಾರ್ಚ್ 24) ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ತುರ್ತು ಸಭೆ ನಡೆಸಿದೆ.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಹಲವು ಸಂಗತಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರ ಅನರ್ಹತೆ ವಿರೋಧಿಸಿ ಕಾಂಗ್ರೆಸ್ನ ಎಲ್ಲ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದು ಕಾಂಗ್ರೆಸ್ ಸಂಸದರೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಮಿತಿಯನ್ನು ರಚಿಸುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಸದಸ್ಯರು, ಸಿಎಲ್ಪಿ ನಾಯಕರು ಹಾಗೂ ಇತರ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ರಾಹುಲ್ ಅವರ ಅನರ್ಹತೆ ವಿರೋಧಿಸಿ ಕಾಂಗ್ರೆಸ್ ನಾಯಕರು ದೆಹಲಿ ಮತ್ತು ಇತರೆಡೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. “ಇಂದು ರಾಹುಲ್ ಗಾಂಧಿ, ನಾಳೆ ಯಾರಾದರೂ ಆಗಬಹುದು” ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಟೀಕಿಸಿದ್ದಾರೆ.
ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಮಾರ್ಚ್ 23 ರಂದು ಅನರ್ಹಗೊಳಿಸಲಾಗಿದೆ.
ಸೂರತ್ನ ನ್ಯಾಯಾಲಯ ರಾಹುಲ್ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಶಿಕ್ಷೆ ಪ್ರಕಟಿಸಿದ ಒಂದು ದಿನದಲ್ಲಿ ಅನರ್ಹತೆ ನಿರ್ಧಾರ ಕೈಗೊಳ್ಳಲಾಗಿದೆ.
ಸೂರತ್ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಸಜೆ ನೀಡಿರುವ ಕಾರಣ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ತೀರ್ಪು ಪ್ರಕಟವಾದ 2023ರ ಮಾರ್ಚ್ 23ರಿಂದಲೇ ಅನರ್ಹತೆ ಅನ್ವಯ ಎಂದು ಹೇಳಲಾಗಿದೆ.
“ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ” ಎಂದು ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಪ್ರಶ್ನಿಸಿದ್ದರು. ಸೂರತ್ನ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಮಾನನಷ್ಟ ಪ್ರಕರಣದ ಮೇಲ್ಮನವಿಯಲ್ಲಿ ರಾಹುಲ್ ಪರ ತೀರ್ಪು ಬಂದರೆ, ತಮ್ಮ ಸ್ಥಾನವನ್ನು ಮರಳಿ ನೀಡುವಂತೆ ಲೋಕಸಭಾ ಕಾರ್ಯಾಲಯವನ್ನು ಕೋರುವುದಕ್ಕೆ ಅವಕಾಶ ಇದೆ.