ಮಣಿಪುರ ರಾಜ್ಯದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾನವೀಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೈಕೋರ್ಟ್ನ ಮೂವರು ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ.
ಇಂದು(ಆಗಸ್ಟ್ 7) ಸುಪ್ರೀಂ ಕೋರ್ಟ್ನಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಈಶಾನ್ಯ ರಾಜ್ಯದಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ನೋಡಿಕೊಳ್ಳಲು ಮೂವರು ನಿವೃತ್ತ ಹೈಕೋರ್ಟ್ನ್ಯಾಯಾಧೀಶರ ಸಮಿತಿ ರಚಿಸಿ ಆದೇಶಿಸಿದರು.
“ಈ ಸಮಿತಿಗೆ ಜಮ್ಮು ಕಾಶ್ಮೀರ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಗೀತಾ ಮಿತ್ತಲ್ ಅಧ್ಯಕ್ಷರಾಗಿರಲಿದ್ದು, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಾಲಿನಿ ಪಿ.ಜೋಶಿ ಮತ್ತು ದೆಹಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆಶಾ ಮೆನನ್ ಸಮಿತಿಯಲ್ಲಿರಲಿದ್ದಾರೆ” ಎಂದು ಡಿ ವೈ ಚಂದ್ರಚೂಡ್ ತಿಳಿಸಿದರು.
ಹಿಂಸಾಚಾರದ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳ ಒಟ್ಟಾರೆ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಎನ್ಐಎ, ಐಬಿ ಮತ್ತು ನಾಗಾಲ್ಯಾಂಡ್ನಲ್ಲಿ ಸೇವೆ ಸಲ್ಲಿಸಿದ ಮಹಾರಾಷ್ಟ್ರ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ನೇಮಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಮಣಿಪುರದಲ್ಲಿ ಮೇ ತಿಂಗಳಿನಿಂದ ಜುಲೈವರೆಗೆ 6,500 ಎಫ್ಐಆರ್ಗಳು ದಾಖಲಾಗಿವೆ. ಪ್ರಕರಣಗಳ ತನಿಖೆಗಾಗಿ 42 ಎಸ್ಐಟಿಗಳನ್ನು ರಚಿಸುವುದಾಗಿ ಮಣಿಪುರ ಸರ್ಕಾರ ಹೇಳಿದೆ. ಇದಕ್ಕೆ, ಆರು ಎಸ್ಐಟಿಗಳ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಆರು ಡಿಐಜಿ ಶ್ರೇಣಿಯ ಅಧಿಕಾರಿಗಳನ್ನು ಹೆಸರಿಸಲು ಆರು ಇತರ ರಾಜ್ಯಗಳ ಡಿಜಿಪಿಗಳಿಗೆ ನಿರ್ದೇಶಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಈ ಸುದ್ದಿ ಓದಿದ್ದೀರಾ? ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ: ನುಹ್ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ
ಮಹಿಳೆಯರ ವಿರುದ್ಧದ ಅಪರಾಧಗಳ 11 ಎಫ್ಐಆರ್ಗಳನ್ನು ಸಿಬಿಐಗೆ ವರ್ಗಾಯಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಇತರ ರಾಜ್ಯಗಳ ಐವರು ಸಹಾಯಕ ಎಸ್ಪಿ/ಎಸ್ಪಿ ಮಟ್ಟದ ಅಧಿಕಾರಿಗಳನ್ನು ಸಿಬಿಐನ ಭಾಗವಾಗಿ ನೇಮಿಸಲು ಆದೇಶ ನೀಡುವುದಾಗಿ ನ್ಯಾಯಾಲಯ ತಿಳಿಸಿದೆ.
ಈ ಅಧಿಕಾರಿಗಳನ್ನು ಆಯಾ ರಾಜ್ಯದ ಡಿಜಿಪಿಗಳು ನಾಮನಿರ್ದೇಶನ ಮಾಡುತ್ತಾರೆ. ಅವರು ಸಿಬಿಐನ ಜಂಟಿ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುತ್ತಾರೆ ಎಂದು ಡಿ ವೈ ಚಂದ್ರಚೂಡ್ ತಿಳಿಸಿದರು.
ಆಗಸ್ಟ್ 1ರಂದು ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಂವಿಧಾನಿಕತೆ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಜನಾಂಗೀಯ ಹಿಂಸಾಚಾರದ ಬಗ್ಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸಿ ನಡೆದ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಮಾಡಿದ್ದಕ್ಕೆ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.
ಈ ಸಂಬಂಧ ಸುಪ್ರೀಂ ಕೋರ್ಟ್ನ ಪ್ರಶ್ನೆಗಳಿಗೆ ಉತ್ತರಿಸಲು ಆಗಸ್ಟ್ 7ರಂದು ಡಿಜಿಪಿ ಅವರಿಗೆ ಸಮನ್ಸ್ ನೀಡಲಾಗಿತ್ತು. 6,523 ಪ್ರಕರಣಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ 11 ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಬಹುದು ಎಂದು ಕೇಂದ್ರವು ಪೀಠವನ್ನು ಒತ್ತಾಯಿಸಿದೆ. ಹಿಂಸಾಚಾರಕ್ಕೆ ಸಂಬಂಧಿಸಿದ ಸುಮಾರು 10 ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.
ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ಮಣಿಪುರ ಡಿಜಿಪಿ ರಾಜೀವ್ ಸಿಂಗ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಜನಾಂಗೀಯ ಹಿಂಸಾಚಾರದ ಬಗ್ಗೆ ಮತ್ತು ಇಲ್ಲಿಯವರೆಗೆ ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಅವರು ವಿವರಣೆ ನೀಡಿದರು.
ಆಗಸ್ಟ್ 1ರಂದು ಮಣಿಪುರ ಹಿಂಸಾಚಾರ ಪ್ರಕರಣಗಳನ್ನು ಪ್ರತ್ಯೇಕಿಸಿರುವ ಬಗ್ಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ವರದಿ ಸಲ್ಲಿಸಿದರು.