- ಪ್ರತಿಭಟನೆ ನಡೆಸುತ್ತಿರುವ ಜಂತರ್ ಮಂತರ್ಗೆ ರಣದೀಪ್ ಸುರ್ಜೇವಾಲಾ ಭೇಟಿ
- ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಮಹಿಳಾ ಕುಸ್ತಿಪಟುಗಳ ಆಗ್ರಹ
ಮಹಿಳಾ ಕುಸ್ತಿಪಟುಗಳು ಮಾಡುತ್ತಿರುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಮುಖ ಆಪಾದಿತನಾಗಿರುವ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೆಹಲಿ ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಗುರುವಾರ (ಮೇ 18) ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಭೇಟಿ ನೀಡಿ ಮಹಿಳಾ ಕುಸ್ತಿಪಟುಗಳೊಂದಿಗೆ ಚರ್ಚೆ ನಡೆಸಿದರು.
ಬ್ರಿಜ್ ಭೂಷಣ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸರ್ಜೇವಾಲಾ ವಾಗ್ದಾಳಿ ನಡೆಸಿದರು. ಬ್ರಿಜ್ ಭೂಷಣ್ ಸಿಂಗ್ ಅವರು ಬಿಜೆಪಿಯ ಸಂಸದರೂ ಆಗಿದ್ದಾರೆ.
ರಣದೀಪ್ ಸುರ್ಜೇವಾಲಾ, ಮಹಿಳಾ ಕುಸ್ತಿಪಟುಗಳ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ಈ ಮೂಲಕ ಅವರು ತಮ್ಮ ಪಕ್ಷದ ಸಂಸದನಾಗಿರುವ ಬ್ರಿಜ್ ಭೂಷಣ್ರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಭಾರತದ ಪ್ರಮುಖ ಕುಸ್ತಿಪಟುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
“ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕುಸ್ತಿಪಟುಗಳು ಕಳೆದ 26 ದಿನದಿಂದ ಹದಗೆಟ್ಟ ವಾತಾವರಣದಲ್ಲಿ ಪ್ರತಿಭಟಿಸುತ್ತಿದ್ದಾರೆ. ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲಿಗೆ ಕುಸ್ತಿಪಟುಗಳ ಮಾತುಗಳನ್ನು ಆಲಿಸದೆ ಪೊಲೀಸರ ಮೂಲಕ ಅವರ ವಿರುದ್ಧ ಕ್ರಮ ಕೈಗೊಂಡಿರಿ. ಇಂತಹ ಗಂಭೀರ ವಿಚಾರದಲ್ಲಿ ನೀವು ಮೌನವಹಿಸಿದ್ದೇಕೆ?” ಎಂದು ರಣದೀಪ್ ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಚುನಾವಣಾ ಫಲಿತಾಂಶ : ‘ಬಿಜೆಪಿ ಮುಕ್ತ ದಕ್ಷಿಣ ಭಾರತ’ದ ಮುನ್ಸೂಚನೆಯೇ?
ರಣದೀಪ್ ಸುರ್ಜೇವಾಲಾ, “ಪ್ರಧಾನಿ ಮೋದಿ ಅವರೇ, ನೀವು ಇಡೀ ಭಾರತದಲ್ಲಿ ಮಹಿಳಾ ಸಬಲೀಕರಣ, ಬೇಟಿ ಪಢಾವೊ-ಬೇಟಿ ಬಚಾವೊ ರೀತಿಯ ಘೋಷಣೆ ನೀಡುತ್ತೀರಿ. ಆದರೆ ನಿಮ್ಮ ಘೋಷಣೆಯ ವಾಸ್ತವ ಚಿತ್ರಣ ಜಂತರ್ ಮಂತರ್ನಲ್ಲಿ ಗೋಚರಿಸುತ್ತಿದೆ” ಎಂದು ವ್ಯಂಗ್ಯವಾಡಿದರು.
ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಳೆದ ತಿಂಗಳಿನಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಮಹಿಳೆಯರು ಸೇರಿದಂತೆ ಅನೇಕ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.