- ಮಾರ್ಚ್ 23ಕ್ಕೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ
- ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ ಅಮಾನತು ಮಾಡಿದ ಲೋಕಸಭೆ
ಮಾನಹಾನಿ ಪ್ರಕರಣದಲ್ಲಿ ವಿಧಿಸಿರುವ ಎರಡು ವರ್ಷ ಜೈಲು ಶಿಕ್ಷೆ ತಡೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ (ಏಪ್ರಿಲ್ 20) ಸೂರತ್ ನ್ಯಾಯಾಲಯ ತಿರಸ್ಕರಿಸಿದೆ.
‘ಮೋದಿ ಉಪನಾಮ’ ಟೀಕೆಗೆ ಸಂಬಂಧಿಸಿ 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ಇದಕ್ಕೆ ತಡೆ ಕೋರಿ ರಾಹುಲ್ ಅವರು ಸಲ್ಲಿಸಿದ ಅರ್ಜಿಯನ್ನು ಗುಜರಾತ್ನ ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿತು.
ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸೂರತ್ ನ್ಯಾಯಾಲಯ 30 ದಿನಗಳ ಕಾಲ ಅವಕಾಶ ನೀಡಿತ್ತು. ಈ ಅವಧಿಯಲ್ಲಿ ಶಿಕ್ಷೆ ಅಮಾನತಿನಲ್ಲಿಟ್ಟಿತ್ತು.
ಶಿಕ್ಷೆ ಪ್ರಕಟಗೊಂಡ ಮಾರನೇ ದಿನ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು.
ಇದಕ್ಕೆ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೆ ರಾಹುಲ್ ಅವರ ಅನರ್ಹತೆಯನ್ನು ವಿರೋಧಿಸಿ ದೇಶದ ಅನೇಕ ಕಡೆ ವ್ಯಾಪಕ ಪ್ರತಿಭಟನೆ ನಡೆಸಲಾಯಿತು.
ಸೂರತ್ ಕೆಳಹಂತದ ನ್ಯಾಯಾಲಯ ವಿಧಿಸಿದ ಶಿಕ್ಷೆಯ ತೀರ್ಪಿಗೆ ತಡೆ ನೀಡುವಂತೆ ಮನವಿ ಮಾಡಿ ರಾಹುಲ್ ಗಾಂಧಿ ಅವರು ಏಪ್ರಿಲ್ 3 ರಂದು ಸೆಷನ್ಸ್ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆರ್. ಪಿ ಮೊಗೇರ ತಿರಸ್ಕರಿಸಿ ಆದೇಶಿಸಿದ್ದಾರೆ.
ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ದೊರೆತಿದ್ದರೆ ಅವರ ಸಂಸತ್ ಸದಸ್ಯತ್ವ ಮರುಸ್ಥಾಪನೆಯಾಗುವ ಅವಕಾಶವಿತ್ತು. ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಅವರ ವಕೀಲರು ಸೆಷನ್ಸ್ ನ್ಯಾಯಾಲಯದಲ್ಲಿ ಎರಡು ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯದ ಶಿಕ್ಷೆ ತಡೆ ಕೋರಿ ಒಂದು ಅರ್ಜಿ ಸಲ್ಲಿಕೆಯಾಗಿತ್ತು. ರಾಹುಲ್ ಅವರ ಮನವಿ ಇತ್ಯರ್ಥ ಆಗುವವರೆಗೆ ಶಿಕ್ಷೆ ಜಾರಿಗೆ ಅವಕಾಶ ನೀಡಬಾರದು ಎಂದು ಸೂರತ್ ನ್ಯಾಯಾಲಯ ಮೂಲಕ ಸಲ್ಲಿಸಲಾದ ಮತ್ತೊಂದು ಅರ್ಜಿಯಲ್ಲಿ ಕೋರಲಾಗಿತ್ತು.
2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಭಾಷಣ ಮಾಡಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.
ಈ ಸುದ್ದಿ ಓದಿದ್ದೀರಾ? ಅಜಿತ್ ಪವಾರ್ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಸರ್ಕಾರದಿಂದ ಹೊರಕ್ಕೆ; ಬಿಜೆಪಿಗೆ ಏಕನಾಥ್ ಶಿಂಧೆ ಬಣ ಎಚ್ಚರಿಕೆ
ಅದನ್ನು ಪ್ರಶ್ನಿಸಿ ಸೂರತ್ (ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಾರ್ಚ್ 23ರಂದು ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು.
ನ್ಯಾಯಾಲಯದ ಈ ಆದೇಶದಿಂದ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಮಾನಹಾನಿ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ತೀರ್ಪು ಮಹತ್ವ ಪಡೆದಿದೆ.
ಇದು ಮುಂಬರುವ 2024ರ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನ್ಯಾಯಾಲಯದ ತೀರ್ಮಾನದಿಂದ ರಾಹುಲ್ ಅವರು ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈ ಬಗ್ಗೆ ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.